ಬೆಂಗಳೂರು: ರಾಜ್ಯಪಾಲರು ಗಾಬರಿಯಾಗಿದ್ದಾರೆಯೇ ಅಥವಾ ಅವರಿಗೆ ಯಾರಿಂದಾದರೂ ಪ್ರಾಣಭೀತಿ ಆವರಿಸಿದೆಯೇ ಎಂಬ ಪ್ರಶ್ನೆ ಕಾಡುತ್ತಿದೆ. ಏಕೆಂದರೆ ರಾಜ್ಯಪಾಲರು ತಾವು ನಿತ್ಯವೂ ಬಳಸುತ್ತಿದ್ದ ಸಾಮಾನ್ಯ ಕಾರನ್ನು ಬದಲಾಯಿಸಿ ಬುಲೆಟ್ ಪ್ರೂಫ್ ನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಕರ್ನಾಟಕ ಪೊಲೀಸ್ ನ ಗುಪ್ತಚರ ಇಲಾಖೆಯಿಂದ ಅವರಿಗೆ ಬುಲೆಟ್ ಕಾರನ್ನು ನೀಡಲಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಸೈಟು ಹಗರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟ ಆರಂಭವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತಷ್ಟು ಉಗ್ರ ಸ್ವರೂಪದಲ್ಲಿ ಪ್ರತಿಭಟನೆ ನಡೆಸಿದ್ದು ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಬುಲೆಟ್ ಪ್ರೂಫ್ ಕಾರು ಬಳಸುತ್ತಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಆದೇಶ ಹೊರಡಿಸಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯನವವರ ಅಭಿಮಾನಿಗಳು ದೊಡ್ಡಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

