ಹಾವೇರಿ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಮೃತಪಟ್ಟ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಘಟನೆ ನಡೆದಿದೆ.
ಮೃತರನ್ನು ನಿದ್ದಪ್ಪ(45), ಶರಣು (40), ಯಲ್ಲಪ್ಪ (50), ನಾಗೇಶ್ (40), ನಾಗೇಶ್ (18) ಯಲ್ಲಪ್ಪ (65), ಗಣೇಶಪ್ಪ (65), ರಂಗನಾಥ ಸ್ವಾಮಿ (62) ಮತ್ತು ಇವರ 6 ಮತ್ತು 4 ವರ್ಷದ ಇಬ್ಬರು ಮಕ್ಕಳು, ಚಾಲಕ ನಾಗೇಶ್ (23), ಶರಣಪ್ಪ (24), ಪರಶುರಾ (40), ಮಂಜುಳಾ ರಾಮಕೃಷ್ಣ (50) ಎಂದು ಗುರುತಿಸಲಾಗಿದೆ.
ಮೃತರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆ ಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದವರು ಎನ್ನಲಾಗಿದೆ. ಚಿಂಚೊಳ್ಳಿ ಮಾಯಮ್ಮನ ದರ್ಶನ ಮಾಡಿಕೊಂದು ಸ್ವಗ್ರಾಮಕ್ಕೆ ವಾಪಸ್ಸಾಗುವಾಗ ಈ ದುರ್ಘಟನೆ ಸಂಭವಿಸಿದೆ.
ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂದಿನಿಂದ ಗುದ್ದಿದೆ. ಪರಿಣಾಮ ಟಿಟಿ ವಾಹನ ನಜ್ಜುಗುಜ್ಜಾಗಿದ್ದು, ವಾಹನದಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿವೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನ ಹೊರ ತೆಗೆಯಲು ಹರಸಾಹಸ ಪಟ್ಟಿದ್ದಾರೆ. ಅಲ್ಲದೇ ಪೊಲೀಸರು ಮೃತರ ಹಿನ್ನೆಲೆ ಪತ್ತೆ ಹಚ್ಚುತ್ತಿದ್ದಾರೆ.

