ಬೆಂಗಳೂರು : ಸೋಲನ್ನು ನಾನೇ ಸ್ವೀಕಾರ ಮಾಡ್ತೇನೆ. ಚನ್ನಪಟ್ಟಣ ಕ್ಷೇತ್ರದ ಮತದಾರರ ತೀರ್ಪಿಗೆ ನಾನು ತಲೆಬಾಗುತ್ತೇನೆ, ಸೋತಿದ್ದೇನೆ ಅಂತ ಸುಮ್ಮನೇ ಕೂರಲ್ಲ, ಹೋರಾಟ ಮಾಡುತ್ತೇವೆ ಎಂದು ಜೆಡಿಎಸ್ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಉಪಚುನಾವಣಾ ಫಲಿತಾಂಶದ ಬಳಿಕ. ಬಿಡದಿಯಲ್ಲಿನ ತೋಟದ ಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚನ್ನಪಟ್ಟಣ ಕ್ಷೇತ್ರದ ಮತದಾರರ ತೀರ್ಪಿಗೆ ನಾನು ತಲೆಬಾಗುತ್ತೇನೆ. 87 ಸಾವಿರ ಮತ ನೀಡಿದ ಚನ್ನಪಟ್ಟಣ ಜನರಿಗೆ ಧನ್ಯವಾದ ತಿಳಿಸುತ್ತೇನೆ. ಜೆಡಿಎಸ್, ಬಿಜೆಪಿ ಕಾರ್ಯಕರ್ತರಿಗೂ ನಾನು ಧನ್ಯವಾದ ಸಮರ್ಪಿಸುತ್ತೇನೆ ಎಂದಿದ್ದಾರೆ.
ಹೆಚ್ಡಿ ದೇವೇಗೌಡ, ಹೆಚ್ಡಿ ಕುಮಾರಸ್ವಾಮಿ ಅವರನ್ನು ಬೆಳೆಸಿದ್ದು ರಾಮನಗರ ಜಿಲ್ಲೆಯ ಜನ. ಚುನಾವಣೆ ಸಂದರ್ಭದಲ್ಲಿ ಜನರಿಗೆ ನಾನು ಭರವಸೆ ಕೊಟ್ಟಿದ್ದೆ. ಆ ಭರವಸೆ ಕೇವಲ ಚುನಾವಣೆಗೆ ಸಂಬಂಧಪಟ್ಟಿದ್ದಲ್ಲ. ನಾನು ಕೊಟ್ಟ ಮಾತನ್ನು ಹಿಂಪಡೆಯಲ್ಲ ಎಂದರು.
ರಾಮನಗರ ಜಿಲ್ಲೆಯಲ್ಲಿ ಎಲ್ಲರಿಗೂ ಧ್ವನಿಯಾಗಿ ಕೆಲಸ ಮಾಡ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಮಾನವೇ ಅಂತಿಮ. ಎಲ್ಲಿ ಎಡವಿದ್ದೇವೆ ಅಂತ ಚರ್ಚೆ ಮಾಡುತ್ತೇವೆ.
ನಾನು ರಾಮನಗರದಲ್ಲಿ ಜನಿಸಿಲ್ಲ, ಆದರೆ, ಭಾವನಾತ್ಮಕ ಸಂಬಂಧವಿದೆ. ನಾನು ಹೆಚ್ಡಿ ಕುಮಾರಸ್ವಾಮಿ ಅವರ ಜೊತೆ ಸೇರಿ ಜಿಲ್ಲೆಯಲ್ಲಿ ಕೆಲಸ ಮಾಡುತ್ತೇನೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಎಲ್ಲರೂ ಪ್ರಾಮಾಣಿಕವಾಗಿ ದುಡಿದಿದ್ದಾರೆ. ಒಂದು ಸಮುದಾಯದ ಮತದಾರರು ಕಾಂಗ್ರೆಸ್ ಪರ ನಿಂತಿದ್ದಾರೆ. ಸೋಲಿನಿಂದ ಎದೆಗುಂದುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯತ್ತ ಕರ್ನಾಟಕ ಜನರ ಚಿತ್ತ ನೆಟ್ಟಿತ್ತು. ಈ ಚುನಾವಣೆ ಅಕ್ಷರಶಃ ವ್ಯಕ್ತಿ ಪ್ರತಿಷ್ಠೆಯ ಕಣವಾಗಿತ್ತು. ಬಿಜೆಪಿ ತೊರೆದು “ಕೈ” ಹಿಡಿದ ಸಿಪಿ ಯೋಗೇಶ್ವರ್ ಅವರು ಕಾಂಗ್ರೆಸ್ನಿಂದ ಕಣಕ್ಕೆ ಇಳಿದಿದ್ದರು. ಇನ್ನು, ಎನ್ಡಿಎ ಮೈತ್ರಿಕೂಟದಿಂದ ಯಾರು ಅಭ್ಯರ್ಥಿ ಎಂಬ ಪ್ರಶ್ನೆ ಮೂಡಿದಾಗ, ಕೊನೆ ಹಂತದಲ್ಲಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕೆ ಇಳಿದಿದ್ದರು.
ಚನ್ನಪಟ್ಟಣ ಚುನಾವಣೆ ಪ್ರತಿಷ್ಠೆಯಾಗಿ ಮಾರ್ಪಟ್ಟಿತ್ತು. ಡಿಕೆ ಬ್ರದರ್ಸ್ vs ಹೆಚ್ಡಿ ಕುಮಾರಸ್ವಾಮಿಯಾಗಿ ಚುನಾವಣಾ ಅಖಾಡ ಬದಲಾಯಿತು. ಕೊನೆಗೆ ನವೆಂಬರ್ 13 ರಂದು ಮತದಾನ ನಡೆದು, ಈಗ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ 25 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲವು ಸಾಧಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರಿಗೆ ಇದು ಮೂರನೇ ಸೋಲಾಗಿದೆ.

