ಬೆಳಗಾವಿ: ಜಿಲ್ಲೆಯ ಖಾನಾಪುರ ಬಳಿ ಸುಳೇಗಾಳಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಎರಡು ಆನೆಗಳು ಸಾವಿಗೀಡಾಗಿರುವ ಬಗ್ಗೆ ನೋವು ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ.
ಖಾನಾಪುರ ತಾಲೂಕಿನ ಸುಳೇಗಾಳಿ ಮೀಸಲು ಅರಣ್ಯ ಪ್ರದೇಶದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಜೊಡಾನೆಗಳು ಸಾವನ್ನಪ್ಪಿದ್ದವು. ಆನೆಗಳ ಹಿಂಡಿನಿಂದ ಬಂದ ಸರಿಸುಮಾರು ನಾಲ್ಕು ವರ್ಷಗಳ ವಯಸ್ಸಿನ ಒಂದು ಗಂಡು, ಒಂದು ಹೆಣ್ಣು ಆನೆ ಮೃತಪಟ್ಟಿದ್ದವು.
ಘಟನೆ ತಿಳಿಯುತ್ತಿದ್ದಂತೆ ನಾಗರಗಾಳಿ ವಲಯದ ಆರ್ಎಫ್ಓ ಸಚೀನ ಹೊನಮನಿ, ಡಿಎಫ್ಓ ಕ್ರಾಂತಿ ಅಧಿಕಾರಿಗಳ ತಂಡದಿಂದ ಸ್ಥಳ ಪರೀಶಿಲನೆ ನಡೆಸಲಾಗಿತ್ತು. ಮೃಗಾಲಯ ವೈದ್ಯ ನಾಗೇಶ ಹುಯಿಲಗೋಳ ಮರಣೋತ್ತರ ಪರಿಕ್ಷೆ ನಡೆಸಿದ್ದರು.
ಕಳೆದ ಕೆಲವು ದಿನಗಳಿಂದ ಇದೇ ಪ್ರದೇಶದಲ್ಲಿ ಆನೆಗಳು ಓಡಾಡುತ್ತಿದ್ದರೂ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೂಕ್ತ ಕ್ರಮ ಕೈಗೊಳ್ಳದೇ ಕರ್ತವ್ಯ ಲೋಪ ಮಾಡಿರುವುದೇ ಆನೆಗಳ ಸಾವಿಗೆ ಕಾರಣ ಎಂಬ ಆರೋಪವಿದೆ.
ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ಲೋಪವಿದ್ದಲ್ಲಿ ಶಿಸ್ತು ಕ್ರಮದ ಶಿಫಾರಸಿನೊಂದಿಗೆ 5 ದಿನಗಳ ಒಳಗಾಗಿ ವರದಿ ಸಲ್ಲಿಸಲು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚಿಸಿದ್ದಾರೆ. ಬೇಲಿಗೆ ವಿದ್ಯುತ್ ಸಂಪರ್ಕ ನೀಡಿ ಆನೆಗಳ ಸಾವಿಗೆ ಕಾರಣರಾದವರ ವಿರುದ್ಧ ಕಾನೂನು ರೀತ್ಯ ಪ್ರಕರಣ ದಾಖಲಿಸಲು ಈಶ್ವರ ಖಂಡ್ರೆ ನಿರ್ದೇಶನ ನೀಡಿದ್ದಾರೆ.

