ಬಳ್ಳಾರಿ, ಜನವರಿ 04: ತಮಗೆ ಮತ್ತು ಕುಟುಂಬದ ಸದಸ್ಯರಿಗೆ ಗಂಭೀರ ಜೀವ ಬೆದರಿಕೆ ಇರುವುದಾಗಿ ಉಲ್ಲೇಖಿಸಿ, ಶಾಸಕ ಜನಾರ್ದನ ರೆಡ್ಡಿ ಅವರು ಸರ್ಕಾರಕ್ಕೆ ಪತ್ರ ಬರೆದು ‘ಝಡ್’ ಶ್ರೇಣಿಯ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದಾರೆ.
ಪತ್ರದಲ್ಲಿ ಇತ್ತೀಚೆಗೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದ ಹಿಂಸಾತ್ಮಕ ಘಟನೆಗಳು, ಗುಂಡಿನ ದಾಳಿ ಪ್ರಕರಣಗಳು ಹಾಗೂ ತಮ್ಮ ಬೆಂಬಲಿಗರ ಮೇಲೆ ನಡೆಯುತ್ತಿರುವ ದಾಳಿಗಳನ್ನು ಉಲ್ಲೇಖಿಸಿರುವ ಅವರು, ಈ ಹಿನ್ನೆಲೆಯಲ್ಲಿ ತಮ್ಮ ಜೀವಕ್ಕೆ ತೀವ್ರ ಅಪಾಯವಿದೆ ಎಂದು ತಿಳಿಸಿದ್ದಾರೆ. ಈಗಿನ ಭದ್ರತಾ ವ್ಯವಸ್ಥೆ ಅಪರ್ಯಾಪ್ತವಾಗಿದ್ದು, ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ ಉನ್ನತ ಮಟ್ಟದ ಭದ್ರತೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
ರಾಜಕೀಯ ವೈಷಮ್ಯ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಹೆಚ್ಚುತ್ತಿರುವ ಅಪಾಯವನ್ನು ಗಮನದಲ್ಲಿಟ್ಟುಕೊಂಡು, ತಕ್ಷಣವೇ ‘ಝಡ್’ ಶ್ರೇಣಿಯ ಭದ್ರತೆ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಅವರು ಸರ್ಕಾರವನ್ನು ಮನವಿ ಮಾಡಿದ್ದಾರೆ. ಈ ಮನವಿಗೆ ಸರ್ಕಾರ ಯಾವ ರೀತಿಯ ಪ್ರತಿಕ್ರಿಯೆ ನೀಡಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

