ಬೆಂಗಳೂರು : ಇಸ್ರೋದ ಮಾಜಿ ಅಧ್ಯಕ್ಷ ಕೆ. ಕಸ್ತೂರಿರಂಗನ್ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಇಸ್ರೋ ಹೇಳಿಕೆಯ ಪ್ರಕಾರ, ಕಸ್ತೂರಿರಂಗನ್ ಬೆಳಿಗ್ಗೆ 10:43ಕ್ಕೆ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಏಪ್ರಿಲ್ 27ರ ಭಾನುವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನದವರೆಗೆ ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇರಿಸಲಾಗುವುದು ಎಂದು ತಿಳಿಸಿದೆ.
ಡಾ. ಕೃಷ್ಣಸ್ವಾಮಿ ಕಸ್ತೂರಿರಂಗನ್ ಅವರು 1940 ಅಕ್ಟೋಬರ್ 24 ರಂದು ಕೇರಳದ ಎರ್ನಾಕುಲಂನಲ್ಲಿ ಜನಿಸಿದರು. ಡಾ. ಕಸ್ತೂರಿರಂಗನ್ ಅವರು ಬಾಂಬೆ ವಿಶ್ವವಿದ್ಯಾಲಯದಿಂದ ಭೌತಶಾಸ್ತ್ರದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ಪಡೆದರು. 1971 ರಲ್ಲಿ ಅಹಮದಾಬಾದ್ನಲ್ಲಿ ಖಗೋಳಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದಿದ್ದರು.
ಸುಮಾರು ಒಂಬತ್ತು ವರ್ಷಗಳಿಗೂ ಹೆಚ್ಚು ಕಾಲ ಅವರು ಇಸ್ರೋ, ಬಾಹ್ಯಾಕಾಶ ಆಯೋಗ ಮತ್ತು ಬಾಹ್ಯಾಕಾಶ ಇಲಾಖೆಯನ್ನು ಮುನ್ನಡೆಸಿದ್ದ ಇವರು. ಆಗಸ್ಟ್ 27-2003ರಂದು ಇಸ್ರೋ ಅಧ್ಯಕ್ಷ ಸ್ಥಾನದಿಂದ ನಿವೃತ್ತರಾದರು. ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಕರಡು ಸಮಿತಿಯ ಅಧ್ಯಕ್ಷತೆ ವಹಿಸಿದ್ದರು. ಹೊಸ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟನ್ನು ಅಭಿವೃದ್ಧಿಪಡಿಸುವ ಜವಾಬ್ದಾರಿಯನ್ನು ಹೊಂದಿರುವ 12 ಸದಸ್ಯರ ಸ್ಟೀರಿಂಗ್ ಸಮಿತಿಯ ನೇತೃತ್ವ ವಹಿಸಿದ್ದರು.
ಇವರ ನೇತೃತ್ವದ ಪಶ್ಚಿಮ ಘಟ್ಟಗಳ ಕಸ್ತೂರಿರಂಗನ್ ಸಮಿತಿ ಪಶ್ಚಿಮ ಘಟ್ಟಗಳ ನೈಸರ್ಗಿಕ ಭೂದೃಶ್ಯದ 59,940 ಚ.ಕಿ.ಮೀ ಪ್ರದೇಶವನ್ನು 2013 ರಲ್ಲಿ ಪರಿಸರ ಸೂಕ್ಷ್ಮ ಎಂದು ಗುರುತಿಸಿತ್ತು. ಅವರು 2003 ರಿಂದ 2009 ರವರೆಗೆ ರಾಜ್ಯಸಭೆಯ ಸದಸ್ಯರಾಗಿ ಮತ್ತು ಆಗಿನ ಭಾರತದ ಯೋಜನಾ ಆಯೋಗದ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.
- ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ..?!
- ಇತ್ತ ಬಜೆಟ್ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ
- ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್ಐಆರ್
- ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ
- ಲೋಕಸಭಾ ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಮಾ.9ರಂದು ಚರ್ಚೆ ಸಾಧ್ಯತೆ

