ಬೆಂಗಳೂರು : ರಾಜ್ಯದಲ್ಲಿ ನಡೆದ ಹೈವೋಲ್ಟಾಗೆ ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಆಡಳಿತಾರೂಢ ಕಾಂಗ್ರೆಸ್ ಎಲ್ಲ ಕ್ಷೇತ್ರಗಳಲ್ಲೂ ಭರ್ಜರಿ ಜಯ ದಾಖಲಿಸುವ ಮೂಲಕ ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ನೇತೃತ್ವದ ಎನ್ಡಿಎಗೆ ಭಾರಿ ಹಿನ್ನಡೆಯುಂಟಾಗಿದೆ. ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ.
ಚನ್ನಪಟ್ಟಣ:
ಸಿ.ಪಿ.ಯೋಗೇಶ್ವರ್- 1,12,642
ನಿಖಿಲ್ ಕುಮಾರಸ್ವಾಮಿ- 87,229
ಗೆಲುವಿನ ಅಂತರ- 25,413
ಶಿಗ್ಗಾಂವಿ:
ಪಠಾಣ ಯಾಸಿರ್ ಅಹಮದ್ ಖಾನ್ -1,00,756
ಭರತ್ ಬೊಮಾಯಿ- 87,308
ಗೆಲುವಿನ ಅಂತರ- 13,448
ಸಂಡೂರು:
ಅನ್ನಪೂರ್ಣ – 93,616
ಬಂಗಾರು ಹನುಮಂತು- 83,967
ಗೆಲುವಿನ ಅಂತರ- 9649
ಚನ್ನಪಟ್ಟಣ :
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಕಾಳಗಕ್ಕೆ ಸಾಕ್ಷಿಯಾಗಿದ್ದ ಚನ್ನಪಟ್ಟಣದಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ 25413 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. 87229 ಮತಗಳನ್ನು ಪಡೆದು ನಿಖಿಲ್ ಕುಮಾರಸ್ವಾಮಿ ಮತ್ತೊಮ್ಮೆ ಸೋಲಿನ ಕಣಿ ಅನುಭವ ಎದುರಿಸುವಂತಾಗಿದೆ.
ಪ್ರಾರಂಭದಿಂದಲೂ ಮುನ್ನಡೆ ಕಾಯ್ದುಕೊಂಡ ಸಿ.ಪಿ.ಯೋಗೇಶ್ವರ್, ಕೊನೆ ಸುತ್ತಿನ ಮತ ಎಣಿಕೆ ಮುಗಿದಾಗ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ 25,413 ಮತಗಳ ಅಂತರಗಳಿಂದ ಗೆಲುವು ಸಾಧಿಸಿದ್ದಾರೆ. ವಿಜೇತ ಸಿ.ಪಿ.ಯೋಗೇಶ್ವರ್ 1,12,642 ಮತಗಳನ್ನು ಪಡೆದರೆ, ನಿಖಿಲ್ ಕುಮಾರಸ್ವಾಮಿ 87,229 ಮತಗಳನ್ನು ಪಡೆದು ಹ್ಯಾಟ್ರಿಕ್ ಸೋಲಿನ ರುಚಿ ಅನುಭವಿಸಿದರು.
ಶಿಗ್ಗಾಂವಿ :
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮಾಯಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಶಿಗ್ಗಾಂವಿಯಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹಮದ್ ಖಾನ್ ಪಠಾಣ್ 13448ಮತಗಳ ಅಂತರದ ಜಯ ಸಾಧಿಸಿದ್ದಾರೆ. ಪಠಾಣ್ 100756 ಮತಗಳನ್ನು ಪಡೆದರೆ ಪ್ರತಿಸ್ಪರ್ಧಿ ಭರತ್ ಬೊಮ್ಮಾಯಿ 87308 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದ್ದಾರೆ.
ಶಿಗ್ಗಾಂವಿಯಲ್ಲಿ ತಾವೇ ಗೆದ್ದಿದ್ದ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಮಾಜಿ ಸಿಎಂ ಬಸವರಾಜ ಬೊಮಾಯಿ ವಿಫಲರಾಗಿದ್ದಾರೆ. ಹಲವರ ವಿರೋಧದ ನಡುವೆಯೂ ತಮ್ಮ ಪುತ್ರ ಭರತ್ ಬೊಮ್ಮಾಯಿಗೆ ಟಿಕೆಟ್ ಕೊಟ್ಟಿದ್ದರು. ತಾವು ಎದುರಿಸಿದ ಮೊದಲ ಚುನಾವಣೆಯಲ್ಲೇ ಅವರಿಗೆ ಸೋಲಿನ ರುಚಿ ಉಂಟಾಗಿದೆ.
ಸೊಂಡೂರು :
ಗಣಿ ಜಿಲ್ಲೆ ಬಳ್ಳಾರಿಯ ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ (93616 ಮತಗಳು) ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು (83967 ಮತಗಳು) ಅವರನ್ನು 9649 ಮತಗಳಿಂದ ಪರಾಭವಗೊಳಿಸಿದ್ದಾರೆ. ಗೆಲ್ಲುವ ಮೂಲಕ ಇದು ಪಕ್ಷದ ಭದ್ರಕೋಟೆ ಎಂಬುದನ್ನು ಸಾಬೀತು ಮಾಡಿದ್ದಾರೆ. ಸಚಿವ ಸಂತೋಷ್ಲಾಡ್, ಸಂಸದ ಇ.ವಿ.ತುಕಾರಾಮ್ ಅವರ ಸಂಘಟಿತ ಹೋರಾಟ ಅಭ್ಯರ್ಥಿ ಗೆಲುವಿಗೆ ಕಾರಣವಾಗಿದೆ
ಜೆಡಿಎಸ್ ಮುಕ್ತ ರಾಮನಗರ :
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಕಾಳಗಕ್ಕೆ ಸಾಕ್ಷಿಯಾಗಿದ್ದ ಚನ್ನಪಟ್ಟಣದಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಗೆಲುವು ಸಾಧಿಸುವ ಮೂಲಕ ರಾಮನಗರ ಸಂಪೂರ್ಣವಾಗಿ ಜೆಡಿಎಸ್ ಮುಕ್ತವಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ, ಮಾಗಡಿ ಮತ್ತು ಕನಕಪುರದಲ್ಲಿ ಗೆದ್ದಿದ್ದ ಕಾಂಗ್ರೆಸ್, ಈ ಬಾರಿ ಚನ್ನಪಟ್ಟಣದಲ್ಲೂ ಗೆಲ್ಲುವ ಮೂಲಕ ಇಡೀ ಜಿಲ್ಲೆಯನ್ನೇ ಜೆಡಿಎಸ್ನಿಂದ ಮುಕ್ತಿಗೊಳಿಸಿದೆ.