ಬೆಂಗಳೂರು,ಆ.17- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಅಕ್ರಮ ನಿವೇಶನ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಶನ್ಗೆ ಅನುಮತಿ ನೀಡಿದ್ದಾರೆ.ಸಿಎಂ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988 ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಮಿತಿ ಸೆಕ್ಷನ್ 218 ರಡಿ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್ ಅವರು ಹೊರಡಿಸಿರುವ ನೋಟಿಸ್ನಲ್ಲಿ ತಿಳಿಸಿದ್ದಾರೆ.ಇದೀಗ ರಾಜ್ಯಪಾಲ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಸಿಎಂ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡಿರುವುದರಿಂದ ಸಿದ್ದರಾಮಯ್ಯಗೆ ಭಾರಿ ಕಾನೂನಿನ ಸಂಕಷ್ಟ ಎದುರಾಗಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ಗೆ ಅನುಮತಿ ವಿಚಾರವಾಗಿ ಮುಖ್ಯ ಕಾರ್ಯದರ್ಶಿ ಶಾಲಿನ್ ರಜನೀಶ್, ಎಸಿಎಸ್ ಅತೀಕ್ಗೆ ನೋಟಿಸ್ ನೀಡಲಾಗಿದೆ. ರಾಜಭವನದಿಂದ ನೋಟಿಸ್ ರವಾನೆಯಾಗಿದೆ. ಮುಡಾ ಪ್ರಕರಣದ ಮೂವರು ದೂರುದಾರರಾದ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್ಗೆ ನೋಟಿಸ್ ಜಾರಿ ಮಾಡಲಾಗಿದೆ. ಪ್ರದೀಪ್ ಈಗಾಗಲೇ ರಾಜಭವನದಲ್ಲಿ ನೋಟಿಸ್ ಸ್ವೀಕರಿಸಿದ್ದಾರೆ.
ಸಿದ್ದರಾಮಯ್ಯನವರು ಅಧಿಕಾರ ದುರುಪಯೋಗಪಡಿಸಿಕೊಂಡು ಮುಡಾದಲ್ಲಿ ತಮ್ಮ ಪತ್ನಿ ಪಾರ್ವತಮ್ಮ ಹೆಸರಿನಲ್ಲಿ 14 ನಿವೇಶನಗಳನ್ನು ಪಡೆದಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರಾದ ಟಿ.ಜೆ.ಅಬ್ರಹಾಂ ಮೈಸೂರು ಮೂಲದ ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್ ಎಂಬುವವರು ರಾಜ್ಯಪಾಲರಿಗೆ ದಾಖಲೆಗಳ ಸಮೇತ ದೂರು ಸಲ್ಲಿಸಿದ್ದರು. ಈ ದೂರುಗಳನ್ನು ಸುದೀರ್ಘವಾಗಿ ಪರಿಶೀಲಿಸಿ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ್ದ ರಾಜ್ಯಪಾಲರು ಪ್ರಾಸಿಕ್ಯೂಶನ್ಗೆ ಅನುಮತಿ ನೀಡಿದ್ದಾರೆ.
ಇತಿಹಾಸದಲ್ಲೇ ಎರಡನೇ ಪ್ರಕರಣ :
ರಾಜ್ಯದ ಇತಿಹಾಸದಲ್ಲೇ ಹಾಲಿ ಮುಖ್ಯಮಂತ್ರಿ ವಿರುದ್ಧ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಶನ್ಗೆ ಸಮ್ಮತಿಸಿದ ಎರಡನೇ ಪ್ರಕರಣ ಇದಾಗಿದೆ.ಈ ಹಿಂದೆ ಅಕ್ರಮ ಡಿ ನೋಟಿಫಿಕೇಶನ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ 2011 ರಲ್ಲಿ ಅಂದಿನ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ರವರು ಪ್ರಾಸಿಕ್ಯೂಶನ್ಗೆ ಅನುಮತಿ ನೀಡಿದ್ದರು.
ಕಾನೂನು ಹೊರಾಟಕ್ಕೆ ತಯಾರಿ :
ಇದರ ಬೆನ್ನಲ್ಲೇ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಂದಿನ ಕಾನೂನು ಹೊರಾಟ ನಡೆಸುವ ಕುರಿತು ತಮ್ಮ ಸಂಪುಟದ ಸಹದ್ಯೋಗಿಗಳು ಹಾಗೂ ಕಾನೂನು ಸಲಹೆಗಾರ ಪೊನ್ನಣ್ಣ ಸೇರಿದಂತೆ ಮತ್ತಿತರರ ಜೊತೆ ಸಿದ್ದರಾಮಯ್ಯನವರು ಸಭೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಸಂಜೆ 5 ಗಂಟೆಗೆ ವಿಶೇಷ ಸಚಿವ ಸಂಪುಟ ಸಭೆ ಕರೆದಿರುವುದು ಕೂಡ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ. ರಾಜ್ಯಪಾಲರ ತೀರ್ಮಾನವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಸರ್ಕಾರ ಸಜ್ಜಾಗಿದೆ.

