ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ದದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ.ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಂಬಂಧ ಹಿಂದಿನ ಸರ್ಕಾರವು ಸಿಬಿಐ ತನಿಖೆಗೆ ವಹಿಸಿ ಅನುಮತಿ ನೀಡಲಾಗಿತ್ತು. ಆದರೇ ಈಗಿನ ಕಾಂಗ್ರೆಸ್ ಸರ್ಕಾರ ಇದನ್ನು ಹಿಂಪಡೆದಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿಬಿಐ ರಿಟ್ ಅರ್ಜಿ ಸಲ್ಲಿಸಿತ್ತು.
ಈ ಅರ್ಜಿಯನ್ನ ವಜಾಗೊಳಿಸಿರುವ ಹೈಕೋರ್ಟ್ ನ್ಯಾಯಪೀಠವು, ಅರ್ಜಿ ವಿಚಾರಣೆಗೆ ಅರ್ಹವಾಗಿಲ್ಲವೆಂದು ತೀರ್ಪು ನೀಡಿದೆ. ಸುಪ್ರಿಂಕೋರ್ಟ್ ನಲ್ಲಿ ಈ ಅರ್ಜಿ ವಿಚಾರಣೆ ಸೂಕ್ತ. ರಾಜ್ಯ ಮತ್ತು ಸಿಬಿಐ ನಡುವಿನ ವಿವಾದ ಸುಪ್ರೀಂಕೋರ್ಟ್ ತೀರ್ಮಾನಿಸಬೇಕು. ಹೈಕೋರ್ಟ್ ತೀರ್ಮಾನಿಸುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿದೆ.
ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಪ್ರರಣದಲ್ಲಿ ಸಿಬಿಐ ತನಿಖೆಗೆ ಅನುಮತಿ ನೀಡಿ ಸರಕಾರ 2019ರ ಸೆ.25 ರಂದು ಆದೇಶ ಹೊರಡಿಸಿತ್ತು. ಅದರಂತೆ ಭ್ರಷ್ಟಾಚಾರ ನಿಗ್ರಹ ಕಾಯಿದೆ 1988ರ ವಿವಿಧ ಸೆಕ್ಷನ್ಗಳಡಿ ಸಿಬಿಐ 2020ರ ಅ.3ರಂದು ಡಿ.ಕೆ. ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿತ್ತು. ಸಿಬಿಐ ದಾಖಲಿಸಿರುವ ಈ ಎಫ್ಐಆರ್ ಕಾನೂನುಬಾಹಿರವಾಗಿದ್ದು, ತನಿಖೆ ರದ್ದುಪಡಿಸಬೇಕೆಂದು ಕೋರಿ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಸಿಬಿಐ ತನಿಖೆಗೆ 2023 ರ ಫೆ.10ರಂದು ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು.ಇದೇ ವೇಳೆ ಡಿಕೆಶಿ, ಸರಕಾರದ ಅನುಮತಿ ಆದೇಶ ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಏಕಸದಸ್ಯಪೀಠ ಕಳೆದ ಏ.20ರಂದು ವಜಾಗೊಳಿಸಿತ್ತು. ಅದನ್ನು ಪ್ರಶ್ನಿಸಿ ಡಿಕೆಶಿ ಮೇಲ್ಮನವಿ ಸಲ್ಲಿಸಿದ್ದರು. ಅದರ ವಿಚಾರಣೆ ಬಾಕಿ ಇದ್ದಾಗ ರಾಜ್ಯದಲ್ಲಿಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆಯಲಾಗಿದ್ದು, ಅದನ್ನು ಪ್ರಶ್ನಿಸಲಾಗಿದೆ.

