ನವದೆಹಲಿ : ಲಾರೆನ್ಸ್ ಬಿಷ್ಣೋಯ್ ಅವರನ್ನು ಎನ್ಕೌಂಟರ್ ಮಾಡಿದ ಪೊಲೀಸರಿಗೆ 1 ಕೋಟಿ 11 ಲಕ್ಷದ 11 ಸಾವಿರದ 111 ರೂಪಾಯಿ ಬಹುಮಾನ ನೀಡುವುದಾಗಿ ಕ್ಷತ್ರಿಯ ಕರ್ಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಡಾ.ರಾಜ್ ಶೇಖಾವತ್ ಅವರು ಘೋಷಿಸಿದ್ದಾರೆ.
ಕಳೆದ ವರ್ಷ ಡಿಸೆಂಬರ್ನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಸದಸ್ಯರಿಂದ ಹತ್ಯೆಗೀಡಾದ ಪ್ರಮುಖ ರಜಪೂತ್ ನಾಯಕ ಸುಖದೇವ್ ಸಿಂಗ್ ಗೊಗಮೆಡಿ ಅವರ ಹತ್ಯೆಗೆ ಸೇಡು ತೀರಿಸಿಕೊಳ್ಳಲು ಕ್ಷತ್ರಿಯ ಕರ್ಣಿ ಸೇನೆಯ ನಾಯಕ ರಾಜ್ ಶೇಖಾವತ್ ಈ ಬಹುಮಾನವನ್ನು ಘೋಷಿಸಿದ್ದಾರೆ.
ಮುಂಬೈನಲ್ಲಿ ಎನ್ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆಯ ಹೊಣೆಯನ್ನು ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿತ್ತು. ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆಯಲ್ಲೂ ಬಿಷ್ಣೋಯ್ ಗ್ಯಾಂಗ್ ಹೆಸರು ಕೇಳಿಬಂದಿತ್ತು. ಅಲ್ಲದೇ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಗೆ ಬಿಷ್ಣೋಯ್ ಗ್ಯಾಂಗ್ಗೂ ಸಂಬಂಧ ಇರುವುದು ತನಿಖೆ ವೇಳೆ ಬೆಳಕಿಗೆ ಬಂದಿತ್ತು.
ಈ ಮೊತ್ತವನ್ನು ಲಾರೆನ್ಸ್ ಬಿಷ್ಣೋಯ್ ಅವರ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ನಿಯೋಜಿಸಲಾದ ಭದ್ರತಾ ಸಿಬ್ಬಂದಿಯಿಂದ ಆತನ ಎನ್ಕೌಂಟರ್ ಅನ್ನು ಖಚಿತಪಡಿಸುವ ವ್ಯಕ್ತಿಗೆ ನೀಡಲಾಗುವುದು ಎಂದು ರಾಜ್ ಶೇಖಾವತ್ ಹೇಳಿದ್ದಾರೆ.
ಲಾರೆನ್ಸ್ ಬಿಷ್ಣೋಯ್ ಪ್ರಸ್ತುತ ಗಡಿಯಾಚೆಗಿನ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಗುಜರಾತ್ನ ಸಬರಮತಿ ಜೈಲಿನಲ್ಲಿದ್ದಾರೆ. ಏಪ್ರಿಲ್ನಲ್ಲಿ ಮುಂಬೈನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಗುಂಡಿನ ದಾಳಿ ನಡೆಸಿದ ಪ್ರಕರಣದಲ್ಲಿ ಅವರ ಹೆಸರು ಕೂಡ ಕೇಳಿಬಂದಿತು. ಆದರೆ ಮುಂಬೈ ಪೊಲೀಸರು ಆತನನ್ನು ಕಸ್ಟಡಿಗೆ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ.

