ಬೆಂಗಳೂರು : ಸ್ಯಾಂಡಲ್ ವುಡ್ ನಟ ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಸೆಟ್ಗೆ ಮರಗಳನ್ನು ಕಡಿದ ಆರೋಪದ ಹಿನ್ನೆಲೆ ಅರಣ್ಯ ಇಲಾಖೆ ಎಫ್ಐಆರ್ ದಾಖಲಿಸಿದೆ.ಕೆವಿನ್ ಸಂಸ್ಥೆ, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್, ಹೆಚ್ಎಂಟಿ ಜನರಲ್ ಮ್ಯಾನೇಜರ್ ವಿರುದ್ಧ ಅರಣ್ಯ ಇಲಾಖೆ ಎಫ್ಐಆರ್ ದಾಖಲು ಮಾಡಿದೆ.
ಟಾಕ್ಸಿಕ್ ಗಾಗಿ ಮರಗಳ ಮಾರಣಹೋಮದ ಆರೋಪ ಕೇಳಿ ಬಂದಿದ್ದ ಬೆನ್ನಲ್ಲೇ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮರ ಕಡಿದ ಆರೋಪ ಸಾಬೀತಾದಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಈಗಾಗಲೇ ಹಲವಾರು ಕಾರಣಗಳಿಂದ ಶೂಟಿಂಗ್ ತಡವಾಗುತ್ತಿದ್ದರೂ ಕೂಡಾ ಚಿತ್ರತಂಡ ಟಾಕ್ಸಿಕ್ ಚಿತ್ರೀಕರಣ ಮುಗಿಸಲು ಅವಿರತವಾಗಿ ಶ್ರಮಿಸುತ್ತಿದೆ. ಇದೀಗ ಟಾಕ್ಸಿಕ್ ಚಿತ್ರತಂಡಕ್ಕೆ ಸಮಸ್ಯೆ ಎದುರಾಗಿದೆ. ಅಷ್ಟಕ್ಕೂ ಆಗಿದ್ದೇನು? ಟಾಕ್ಸಿಕ್ ಚಿಂತ್ರತಂಡದಿಂದ ಮರಗಳನ್ನ ಕಡಿದ ಆರೋಪ ಕೇಳಿ ಬಂದಿದ್ದು ಅರಣ್ಯ ಇಲಾಖೆಯಿಂದ ಎಫ್ಐಆರ್ ದಾಖಲಾಗಿದೆ. ಕೋರ್ಟ್ ಅನುಮತಿ ಪಡೆದು ಎಫ್ಐಆರ್ ದಾಖಲಿಸಲಾಗಿದ್ದು ಕೆವಿಎನ್ ಪ್ರೊಡಕ್ಷನ್ಸ್, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್, ಹೆಚ್ಎಂಟಿ ಜನರಲ್ ಮ್ಯಾನೇಜರ್ ವಿರುದ್ದ ಎಫ್ಐಆರ್ ದಾಖಲಾಗಿದೆ.
ಈ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಹೆಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಸ್ಯಾಟೆಲೈಟ್ ಚಿತ್ರಗಳಿಂದ ಕಂಡುಬರುತ್ತಿದೆ. ಅರಣ್ಯ ಇಲಾಖೆ ಕಾಯ್ದೆಯನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆದರೆ ಇದರಿಂದ ಟಾಕ್ಸಿಕ್ ಚಿತ್ರ ಬಿಡುಗಡೆಗೆ ಯಾವುದೇ ಸಮಸ್ಯೆಯಿಲ್ಲ ಎಂದಿದ್ದಾರೆ.
ನಮ್ಮ ಅರಣ್ಯ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ. ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡುಬಂದಲ್ಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ. ಈ ಬಗ್ಗೆ ಹೆಚ್ಎಂಟಿ ಇದು ತಮ್ಮ ಜಾಗ ಅಲ್ಲ ಈ ಜಾಗವು ಕೆನರಾ ಬ್ಯಾಂಕ್ ಒಡೆತನದಲ್ಲಿದೆ ಎಂದು ಸ್ಪಷ್ಟನೆ ನೀಡಿತ್ತು.

