ನವದೆಹಲಿ : ಬಿಜೆಪಿ ನೇತೃತ್ವದ ಸರ್ಕಾರವು ವಕ್ಫ್ ಕಾಯ್ದೆ, 1995 ಅನ್ನು ತಿದ್ದುಪಡಿ ಮಾಡುವ ವಕ್ಫ್ (ತಿದ್ದುಪಡಿ) ಮಸೂದೆ, 2024 ಅನ್ನು ಗುರುವಾರ ಲೋಕಸಭೆಯಲ್ಲಿ ಪರಿಚಯಿಸಿದೆ. ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ವಕ್ಫ್ (ತಿದ್ದುಪಡಿ) ಮಸೂದೆ, 2024 ಅನ್ನು ಲೋಕಸಭೆಯಲ್ಲಿ ಮಂಡಿಸಿದರು.
ಈ ಮಸೂದೆಯು ರಾಜ್ಯ ವಕ್ಫ್ ಮಂಡಳಿಗಳ ಅಧಿಕಾರಗಳು, ವಕ್ಫ್ ಆಸ್ತಿಗಳ ನೋಂದಣಿ ಮತ್ತು ಸಮೀಕ್ಷೆ ಮತ್ತು ಅತಿಕ್ರಮಣಗಳನ್ನು ತೆಗೆದುಹಾಕಲು ಸಂಬಂಧಿಸಿದ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪರಿಹರಿಸುವ ಗುರಿಯನ್ನು ಹೊಂದಿದೆ.
ಈ ಮಸೂದೆ ಈಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.ಪ್ರಸ್ತುತ ವಕ್ಫ್ ಬೋರ್ಡ್ ಹೊಂದಿರುವ ಏಕಪಕ್ಷೀಯ ಅಧಿಕಾರಗಳನ್ನು ಕಡಿಮೆ ಮಾಡಲು ಕೇಂದ್ರ ಉದ್ದೇಶಿಸಿದೆ. ಹಿಂದಿನ ಕಾಯ್ದೆಯಲ್ಲಿ ವಕ್ಫ್ ಬೋರ್ಡ್ಗೆ ಹೆಚ್ಚಿನ ಅಧಿಕಾರ ನೀಡಿತ್ತು. ಇದರ ಪ್ರಕಾರ ಭೂಮಿಯನ್ನು ವಕ್ಫ್ ಬೋರ್ಡ್ನಿಂದ ಹಿಂಪಡೆಯುವುದು ಅಸಾಧ್ಯವಾಗಿತ್ತು. ಇದಾದ ನಂತರ ವಕ್ಫ್ ಬೋರ್ಡ್ ತೆಗೆದುಕೊಳ್ಳುವ ನಿರ್ಣಯಗಳು ಪದೇ ಪದೇ ವಿವಾದಕ್ಕೆ ಕಾರಣವಾಗುತ್ತಿದ್ದವು. ಇದನ್ನು ತಡೆಯುವುದರ ಸಲುವಾಗಿ ವಕ್ಫ್ ಕಾಯ್ದೆಗೆ ಕೇಂದ್ರ ತಿದ್ದುಪಡಿ ತಂದಿದೆ.
ಈ ಮಸೂದೆಗೆ ಸಂಸತ್ ಅನುಮೋದನೆ ನೀಡಿದಲ್ಲಿ ಮುಂದೆ ಯಾವುದೇ ಆಸ್ತಿಯನ್ನು ಇದು ತನ್ನದು ಎಂದು ಘೋಷಿಸಿಕೊಳ್ಳಲು ವಕ್ಫ್ಬೋರ್ಡ್ಗೆ ಅಸಾಧ್ಯ. ಕೇಂದ್ರದ ಈ ನಡೆಯನ್ನು ವಿಪಕ್ಷಗಳು ತೀವ್ರವಾಗಿ ಟೀಕಿಸುತ್ತಿವೆ.
ಈ ಮಸೂದೆಯು ವಕ್ಫ್ ಮಂಡಳಿಗಳ ಆಸ್ತಿಯನ್ನು ನಿರ್ವಹಿಸಲು ಅಧಿಕಾರವನ್ನು ನಿರ್ಬಂಧಿಸುವ ಗುರಿಯನ್ನು ಹೊಂದಿದೆ ಮತ್ತು ಹೆಚ್ಚಿನ ಸರ್ಕಾರಿ ನಿಯಂತ್ರಣವನ್ನು ಒದಗಿಸುತ್ತದೆ.
ಯಾವುದೇ ವಕ್ಫ್ ಆಸ್ತಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನೋಂದಣಿಯನ್ನು ಕಡ್ಡಾಯಗೊಳಿಸಲು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ ವಕ್ಫ್ ಆಸ್ತಿಯೇ ಅಥವಾ ಸರ್ಕಾರಿ ಭೂಮಿಯೇ ಎಂಬುದನ್ನು ಜಿಲ್ಲಾಧಿಕಾರಿಗಳು ನಿರ್ಧರಿಸಬೇಕಾಗುತ್ತದೆ. ಜಿಲ್ಲಾಧಿಕಾರಿಗಳ ತೀರ್ಮಾನವೇ ಅಂತಿಮವಾಗಿರುತ್ತದೆ.

