ಮೈಸೂರು: ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ಮೈಸೂರು , ಕೊಪ್ಪಳ ಸೇರಿ ರಾಜ್ಯದ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿತು.
ಮೈಸೂರಿನ ಸಿದ್ಧಾರ್ಥ್ ಬಡಾವಣೆಯಲ್ಲಿರುವ ಪಾಲಿಕೆ ಉಪ ವಿಭಾಗಧಿಕಾರಿ ವೆಂಕಟರಾಮ್ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಕೌಶಲ್ಯಾಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್ ಸ್ವಾಮಿಯ ಸಾತಗಳ್ಳಿಯ ಜೆಪಿ ನಗರದಲ್ಲಿರುವ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಕೊಪ್ಪಳ ನಗರದಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಬಳ್ಳಾರಿಯಲ್ಲಿ ಮೂರು ಕಡೆ ದಾಳಿ
ಬಳ್ಳಾರಿಯಲ್ಲಿ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ ಮಾಡಲಾಗಿದೆ. ಬೆಂಗಳೂರು ಟೌನ್ ಮತ್ತು ರೂರಲ್ ಪ್ಲ್ಯಾನಿಂಗ್ ಆಫೀಸರ್ ಮಾರುತಿ ಬಗಲಿಗೆ ಸೇರಿದ 3 ಸ್ಥಳಗಳ ಮೇಲೆ ದಾಳಿ ಮಾಡಿರುವ ಬೆಂಗಳೂರು ಲೋಕಾಯುಕ್ತ ತಂಡ ಪರಿಶೀಲನೆ ನಡೆಸಿದೆ. ಬೆಂಗಳೂರು ನಿವಾಸಿಯಾಗಿರುವ ಅಧಿಕಾರಿ ಮಾರುತಿ ಬಗಲಿ ವಿರುದ್ಧ ರಾಜ್ಯದ ಹಲವೆಡೆ ಆಸ್ತಿ ಮಾಡಿರುವ ಆರೋಪ ಕೇಳಿಬಂದಿದೆ.
ಕೊಪ್ಪಳ :
ಇನ್ನು ಕೊಪ್ಪಳ ನಗರದಲ್ಲೂ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ಮನೆಯಲ್ಲಿ ಮಲಗಿದ್ದ ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ವಿಭಾಗದ ಉಪ ನಿದೇರ್ಶಕ ಶೆಕು ಚವ್ಹಾಣ್ಗೆ ಶಾಕ್ ನೀಡಿದ್ದಾರೆ. ಲೋಕಾ ಅಧಿಕಾರಿಗಳನ್ನು ಶೆಕು ಕಂಡು ಕಕ್ಕಾಬಿಕ್ಕಿಯಾಗಿದ್ದಾರೆ.
ಲೋಕಾಯುಕ್ತ ಇನ್ಸ್ಪೆಕ್ಟರ್ ಸುನೀಲ ಮೇಗಳಮನಿ ನೇತೃತ್ವದಲ್ಲಿ ಅಭಿಷೇಕ ಬಡಾವಣೆ ಹಾಗೂ ಕೀರ್ತಿ ಕಾಲೋನಿಯಲ್ಲಿರುವ ಶೇಕು ಚವ್ಹಾಣ್ಗೆ ಸೇರಿದ ಎರಡು ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲೂ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

