ಮೈಸೂರು: ಮುಡಾ ಹಗರಣ ದಿನೇ ದಿನೇ ಸಿಎಂ ಸಿದ್ದರಾಮಯ್ಯಗೆ (Siddaramaiah) ಕಂಟಕವಾಗಿ ಪರಿಣಮಿಸುತ್ತಿದ್ದು, ಇದೀಗ ಮೈಸೂರಿನ (Mysuru) ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಕಲಿ ದಾಖಲೆ ಸೃಷ್ಟಿ ಮೂಲಕ ಮುಡಾ ವಂಚಿಸಿ ಕೋಟ್ಯಂತರ ಬೆಲೆಯ ನಿವೇಶನ ಪಡೆದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂ ಮಾಲೀಕ ಎಂದು ಹೇಳುವ ದೇವರಾಜು ಹಾಗೂ ಕುಟುಂಬದವರ ವಿರುದ್ಧ ದೂರು ದಾಖಲಾಗಿದೆ.
ಇದೇ ಪ್ರಕರಣದಲ್ಲಿ ಜಿಲ್ಲಾಧಿಕಾರಿ, ತಹಸೀಲ್ದಾರ್, ಉಪ ನೊಂದಣಾಧಿಕಾರಿ ಹಾಗೂ ಮುಡಾ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆಯೂ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬವರು ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಅವ್ಯವಹಾರ -ಅಧಿಕಾರಿಗಳು ಅಧಿಕಾರ ದುರ್ಬಳಕೆ ಮಾಡಿದ್ದು ನಿಜ: ಡಿಕೆ ಶಿವಕಮಾರ್
ಪೊಲೀಸರಿಗೆ ದೂರು ನೀಡಿದ್ದಷ್ಟೇ ಅಲ್ಲದೆ, ರಾಜ್ಯಪಾಲ, ರಾಜ್ಯ ಮುಖ್ಯಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೂ ಪತ್ರ ಬರೆದಿದ್ದಾರೆ. ಪತ್ರದ ಮೂಲಕ ಸ್ನೇಹಮಯಿಕೃಷ್ಣ ಪ್ರಕರಣ ಸಂಬಂಧ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಇದನ್ನೂ ಓದಿ: ಬರ್ತಡೇ ದಿನವೇ ಸಾವಿಗೀಡಾದ ಕಾಲೇಜು ವಿದ್ಯಾರ್ಥಿನಿ
ದೂರುದಾರರ ಪ್ರಶ್ನೆಗಳೇನು?
1. ಪಾರ್ವತಿ ಪ್ರಕರಣದಲ್ಲಿ ಭೂ ಸ್ವಾಧೀನದಿಂದ ಕೈಬಿಟ್ಟಿರುವ ರಾಜ್ಯಪತ್ರದ ಬಗ್ಗೆಯೇ ಅನುಮಾನ.
2. ಮೂಲ ಭೂ ಮಾಲೀಕರ ಮಗ ಎನ್ನುವ ದೇವರಾಜು ಅಸ್ತಿತ್ವದ ಬಗ್ಗೆ ಪ್ರಶ್ನೆ.
3. 1998ರಲ್ಲಿ ಭೂ ಸ್ವಾಧಿನದಿಂದ ಕೈ ಬಿಟ್ಟಿದ್ದು ನಿಜವಾದರೆ 2010ರ ವರೆಗಿನ ಆರ್ಟಿಸಿ ಗಳಲ್ಲಿ ಭೂ ಸ್ವಾಧೀನ ಎಂಬ ಉಲ್ಲೇಖ ಏಕಿದೆ?
4. ದೇವರಾಜು ಮತ್ತು ನಂತರ ಮಲ್ಲಿಕಾರ್ಜುನಸ್ವಾಮಿ ಅವರ ಮಾಲೀಕತ್ವ ಮತ್ತು ಸ್ವಾಧೀನದಲ್ಲಿ ಈ ಜಮೀನು ಇದ್ದಿದ್ದರೆ ಪ್ರಾಧಿಕಾರದ ಅಭಿವೃದ್ಧಿ ಕೆಲಸವನ್ನ ಏಕೆ ತಡೆದಿಲ್ಲ?
5. ಮಲ್ಲಿಕಾರ್ಜುನ ಹಾಗೂ ಪಾರ್ವತಿ ಅವರ ಹೆಸರಿಗೆ ಖಾತೆ ವರ್ಗಾವಣೆ ಮಾಡುವ ವೇಳೆ ಸ್ಥಳ ಪರಿಶೀಲನೆ ಮಾಡಲಿಲ್ಲವೇ?
6. ಮಾಡಿದ್ದರೆ ಮುಡಾ ಅಭಿವೃದ್ಧಿ ಮಾಡಿರುವುದು ಕಂಡುಬಂದಿದ್ದರೂ ಕೃಷಿ ಭೂಮಿ ಎಂದು ಹೇಗೆ ಖಾತೆ ಮಾಡಿದರು?
ನಿಜವಾದ ಭೂ ಮಾಲೀಕರ ವಂಶವೃಕ್ಷ, ಜವರ ಅವರ ಮರಣ ಪ್ರಮಾಣಪತ್ರ ಸೇರಿ ಹಲವು ದಾಖಲೆಗಳ ಉಲ್ಲೇಖ ಇಲ್ಲ ಯಾಕೆ?
7. ಕೆಸರೆ ಗ್ರಾಮದ 464ನೇ ಸರ್ವೆ ನಂಬರ್ನ 3.16 ಎಕರೆ ಭೂ ಭೂ ಸ್ವಾಧೀನ ಕೈ ಬಿಡಲು ಕಾರಣ ಏನು?
ಅಂತಹ ಯಾವ ಪ್ರಭಾವವನ್ನು (ಕಾರಣವನ್ನು) ಬಳಸಿದ್ದರು?
8. 2005ರಲ್ಲೇ ಮಲ್ಲಿಕಾರ್ಜುನ ಸ್ವಾಮಿಗೆ ಅನ್ಯಕ್ರಾಂತ ಆಗಿದ್ದರೆ ಸದರಿ ಉಲ್ಲೇಖ ಆರ್ಟಿಸಿಗಳಲ್ಲಿ ಯಾಕೆ ಇಲ್ಲ?
9. 2004-05ನೇ ಸಾಲಿನ ಆರ್ಟಿಸಿಯ ಕಲಂ 10ರಲ್ಲಿ MR8/92-93 ಎಂಬ ಉಲ್ಲೇಖವಿದೆ. ಇದರ MR ಗಮನಿಸಿದಾಗ ಮಾರಪ್ಪ ಎಂಬುವವರಿಗೆ ಸೇರಿದ ದಾಖಲೆ ಎಂದು ಗೊತ್ತಾಗುತ್ತದೆ.
10. ಮಲ್ಲಿಕಾರ್ಜುನ ಸ್ವಾಮಿಗೆ ಭೂಮಿ ಮಾರಿರುವ ದೇವರಾಜು ಕುಟುಂಬದ ವಿಳಾಸವೇ ಅಸ್ತಿತ್ವದಲ್ಲಿ ಇಲ್ಲದಿರುವುದು ದೊಡ್ಡ ಅನುಮಾನ.
ಪ್ರಕರಣದಲ್ಲಿ ಇಷ್ಟೆಲ್ಲ ಅನುಮಾನಗಳು ಇವೆ. ಹೀಗಾಗಿ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು. 10 ದಿನಗಳ ಒಳಗೆ ಇದಕ್ಕೆ ಉತ್ತರ ಕೊಡಬೇಕು ಎಂದು ಆಗ್ರಹಿಸಿರುವುದಾಗಿ ದೂರುದಾರ ಸ್ನೇಹಮಯಿ ಕೃಷ್ಣ ‘ಟಿವಿ9’ಗೆ ತಿಳಿಸಿದ್ದಾರೆ.

