ಮೈಸೂರು,ಸೆ : ಮೈಸೂರು ದಸರಾ ಕಾರ್ಯಕ್ರಮ ವೇಳಾಪಟ್ಟಿಯನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದ್ದು, ಅಕ್ಟೋಬರ್ 3 ರಂದು ಚಾಮುಂಡಿ ಬೆಟ್ಟದಲ್ಲಿ 9.15 ರಿಂದ 9.45 ರ ನಡುವೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂಪ ನಾಗರಾಜಯ್ಯ ಅವರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಅ.3 ರಿಂದ 11 ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರು ನಡೆಯಲಿದ್ದು, 12 ರಂದು ಜಂಬೂ ಸವಾರಿ ನಡೆಯಲಿದೆ. ಮಧ್ಯಾಹ್ನ 1.41 ರಿಂದ 2.10 ರ ನಡುವೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜ ಪೂಜೆ ನಡೆಯಲಿದೆ. ಸಂಜೆ 4 ಗಂಟೆಯಿಂದ 4.30 ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ (ಜಂಬೂಸವಾರಿಗೆ) ಚಾಲನೆ ದೊರೆಯಲಿದೆ.
ಸಂಜೆ 7 ಗಂಟೆಗೆ ಬನ್ನಿಮಂಟಪ ಆವರಣದಲ್ಲಿ ಪಂಜಿನ ಕವಾಯತು ನಡೆಯಲಿದ್ದು, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಕವಾಯತನ್ನು ಉದ್ಘಾಟಿಸಲಿದ್ದಾರೆ.ದಸರಾದ ಕೇಂದ್ರ ಬಿಂದು ಯುವ ದಸರಾವನ್ನು ಈ ಬಾರಿ ಮಾನಸಗಂಗೋತ್ರಿ ವಿಶ್ವವಿದ್ಯಾಲಯದ ಮುಕ್ತರಂಗಮಂದಿರದಲ್ಲಿ ಆಯೋಜಿಸಲಾಗಿದ್ದು, ಪ್ರತಿದಿನ ಸಂಜೆ 5 ಗಂಟೆಯಿಂದ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಇತರ ಚಟುವಟಿಕೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದಸರಾ ಅಧಿಕೃತ ವೆಬ್ಸೈಟ್ ಅಥವಾ ಮೈಸೂರಿನ ಸ್ಥಳೀಯ ಪ್ರವಾಸೋದ್ಯಮ ಕಚೇರಿಯಲ್ಲಿ ಮಾಹಿತಿ ಪಡೆಯಬಹುದಾಗಿದೆ.

