ಬೆಂಗಳೂರು, ಜನವರಿ 08: ಬಳ್ಳಾರಿ ಘಟನೆಯ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಈ ಪ್ರಕರಣವನ್ನು ತನಿಖೆ ಮಾಡುವ ಸಂಪೂರ್ಣ ಸಾಮರ್ಥ್ಯ ರಾಜ್ಯ ಪೊಲೀಸರಿಗೆ ಇದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಪೊಲೀಸರಿಗೆ ತನಿಖೆ ನಡೆಸಲು ಆಗುವುದಿಲ್ಲ ಎಂಬಂತಹ ಪರಿಸ್ಥಿತಿ ಬಂದಾಗ ಮಾತ್ರ ಸಿಬಿಐಗೆ ನೀಡುವ ಬಗ್ಗೆ ಚರ್ಚಿಸಬಹುದು. ಈಗಾಗಲೇ ಯಾವುದೇ ಪ್ರಕರಣಗಳನ್ನು ಸಿಬಿಐಗೆ ವಹಿಸದಿರಲು ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಆದ್ದರಿಂದ ಸಿಬಿಐ ತನಿಖೆಯ ಅಗತ್ಯವೇ ಇಲ್ಲ ಎಂದು ಹೇಳಿದರು.
ಈ ವೇಳೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಾ. ಪರಮೇಶ್ವರ್, ಕುಮಾರಸ್ವಾಮಿ ಅವರು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು ಮತ್ತು ಪ್ರಸ್ತುತ ಕೇಂದ್ರದಲ್ಲಿ ಬೃಹತ್ ಕೈಗಾರಿಕೆ ಸಚಿವರಾಗಿದ್ದಾರೆ. ನನ್ನ ಬಗ್ಗೆ ವೈಯಕ್ತಿಕವಾಗಿ ಹೇಳಿಕೆ ನೀಡಿದ್ದಾರೆ. ನಾನು ಅವರ ಬಗ್ಗೆ ಏನು ಬೇಕಾದರೂ ಮಾತನಾಡಬಹುದು. ಆದರೆ ಅವರು ಜವಾಬ್ದಾರಿಯುತವಾಗಿ ಹೇಳಿಕೆ ನೀಡಿದ್ದಾರೆ ಎಂದು ಭಾವಿಸುತ್ತೇನೆ. ಅವರ ಮಾತುಗಳನ್ನು ಸ್ವೀಕರಿಸುತ್ತೇನೆ ಎಂದರು.
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಹೇಗೆ ನಿರ್ವಹಿಸಬೇಕು ಎಂಬ ಅರಿವು ನನಗಿದೆ. 38 ವರ್ಷಗಳ ರಾಜಕೀಯ ಅನುಭವವಿದ್ದು, ಹಲವು ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ. ಕುಮಾರಸ್ವಾಮಿ ಅವರ ಜೊತೆಯಲ್ಲೂ ಕೆಲಸ ಮಾಡಿದ್ದೇನೆ. ಹೀಗಾಗಿ ನನ್ನ ಸಾಮರ್ಥ್ಯ ಮತ್ತು ವ್ಯಕ್ತಿತ್ವ ಅವರಿಗೆ ತಿಳಿದಿದೆ. ಅವರ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದರು.
ಹುಬ್ಬಳ್ಳಿ ಘಟನೆಯ ಕುರಿತು ಪೊಲೀಸ್ ಕಮಿಷನರ್ ಶಶಿಕುಮಾರ್ ಸ್ಪಷ್ಟನೆ ನೀಡಿದ್ದು, ಮಹಿಳೆಯನ್ನು ಪೊಲೀಸರು ವಿವಸ್ತ್ರಗೊಳಿಸಿಲ್ಲ. ಬಂಧನದ ವೇಳೆ ಮಹಿಳೆಯೇ ಆ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ಕಮಿಷನರ್ ವಿವರಿಸಿದ್ದಾರೆ. ಅವರು ಸ್ಪಷ್ಟನೆ ನೀಡಿದ ನಂತರ ಇನ್ನೇನು ಬೇಕು? ಎಲ್ಲ ವಿಷಯಗಳಲ್ಲೂ ರಾಜಕೀಯ ಮಾಡುವುದು ಸರಿಯಲ್ಲ. ಹೆಣ್ಣುಮಗಳ ವಿಚಾರವನ್ನು ರಾಜಕೀಯಕ್ಕೆ ಬಳಸುವುದು ಸೂಕ್ತವಲ್ಲ ಎಂದು ಡಾ. ಪರಮೇಶ್ವರ್ ಅಭಿಪ್ರಾಯಪಟ್ಟರು.
ಯಾವುದೇ ರಾಜಕೀಯ ಪಕ್ಷದವರನ್ನು ಅವರ ಪಕ್ಷದ ಹಿನ್ನೆಲೆಯ ಆಧಾರದಲ್ಲಿ ಟಾರ್ಗೆಟ್ ಮಾಡುವುದಿಲ್ಲ. ಪೊಲೀಸರು ಆ ರೀತಿಯಲ್ಲಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಮತ್ತು ಮಾಡಬಾರದು. ಇದಕ್ಕೆ ಯಾವುದೇ ಅವಕಾಶ ನೀಡುವುದಿಲ್ಲ. ಪೊಲೀಸರು ರಾಜಕೀಯ ದುರುದ್ದೇಶದಿಂದ ನಡೆದುಕೊಳ್ಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಅಕ್ರಮ ಬಾಂಗ್ಲಾ ವಲಸಿಗರ ವಿಚಾರದಲ್ಲಿ ಈಗಾಗಲೇ ಸಾಕಷ್ಟು ಕ್ರಮ ಕೈಗೊಳ್ಳಲಾಗಿದೆ. ಅನಧಿಕೃತವಾಗಿ ರಾಜ್ಯದಲ್ಲಿ ಇರುವ ಬಾಂಗ್ಲಾ ದೇಶದವರನ್ನು ಪತ್ತೆಹಚ್ಚಿ ಗಡಿಪಾರು ಮಾಡಲಾಗುತ್ತಿದೆ. ಮುಂದೆಯೂ ಎಲ್ಲೆಲ್ಲಿದ್ದರೂ ಪತ್ತೆ ಮಾಡಿ ಗಡಿಪಾರು ಮಾಡುತ್ತೇವೆ ಎಂದು ಗೃಹ ಸಚಿವರು ತಿಳಿಸಿದರು.

