ಬೆಂಗಳೂರು: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಕಾಮೆಂಟ್ಗಳನ್ನು ಪೋಸ್ಟ್ ಮಾಡಿದ ಪ್ರಕರಣದಲ್ಲಿ ಸೈಬರ್ ಅಪರಾಧ ಪೊಲೀಸ್ರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಚಂದ್ರು ಮತ್ತು ನಿಖಿಲ್ ಎಂದು ಗುರುತಿಸಲಾಗಿದ್ದು, ಇವರಲ್ಲಿ ಓರ್ವ ಬೆಂಗಳೂರು ಮೂಲದವನು ಎಂದು ಪೊಲೀಸರು ತಿಳಿಸಿದ್ದಾರೆ.
2025ರ ಡಿಸೆಂಬರ್ನಲ್ಲಿ ವಿಜಯಲಕ್ಷ್ಮಿ ಅವರು ದಾವಣಗೆರೆಯಲ್ಲಿ ನೀಡಿದ್ದ ಹೇಳಿಕೆಯ ಬಳಿಕ, ಸಾಮಾಜಿಕ ಜಾಲತಾಣಗಳಲ್ಲಿ ಅವರ ವಿರುದ್ಧ ಅಶ್ಲೀಲ ಮತ್ತು ನಿಂದನಾತ್ಮಕ ಕಾಮೆಂಟ್ಗಳು ವ್ಯಾಪಕವಾಗಿ ಹರಿದಾಡಿದ್ದವು. ಇದರಿಂದ ತೀವ್ರ ಅಸಮಾಧಾನಗೊಂಡ ವಿಜಯಲಕ್ಷ್ಮಿ, 15 ಇನ್ಸ್ಟಾಗ್ರಾಂ ಖಾತೆಗಳು ಹಾಗೂ 150ಕ್ಕೂ ಹೆಚ್ಚು ಅವಹೇಳನಕಾರಿ ಕಾಮೆಂಟ್ಗಳ ವಿರುದ್ಧ ಸೈಬರ್ ಪೊಲೀಸರಿಗೆ ಫೋಟೋ ಸಾಕ್ಷ್ಯಗಳೊಂದಿಗೆ ದೂರು ಸಲ್ಲಿಸಿದ್ದರು.
ದೂರು ದಾಖಲಿಸಿಕೊಂಡ ಸೈಬರ್ ಪೊಲೀಸ್ರು ತನಿಖೆ ನಡೆಸಿ, 15 ಖಾತೆಗಳ ಪೈಕಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಳಿದ ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತೀಚೆಗೆ ವಿಜಯಲಕ್ಷ್ಮಿ ಅವರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಅವರನ್ನು ಭೇಟಿ ಮಾಡಿ, ತಮ್ಮ ದೂರಿನ ವಿಚಾರದಲ್ಲಿ ವಿಳಂಬವಾಗುತ್ತಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಶೀಲಿಸುವುದಾಗಿ ಆಯುಕ್ತರು ಭರವಸೆ ನೀಡಿದ್ದರು.

