ಶ್ರೀನಗರ : ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ 2024ರ ಫಲಿತಾಂಶದ ಬಳಿಕ ಕಾಂಗ್ರೆಸ್-ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟದ ಸರ್ಕಾರ ಇಂದಿ (ಬುಧವಾರ) ಅಸ್ತಿತ್ವಕ್ಕೆ ಬಂದಿದೆ. ಚುನಾವಣೆಯಲ್ಲಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನ್ಯಾಷನಲ್ ಕಾನ್ಪರೆನ್ಸ್ನ ಒಮರ್ ಅಬ್ದುಲ್ಲಾ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು.
ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್ನ್ಯಾಶನಲ್ ಕನ್ವೆನ್ಷನ್ ಸೆಂಟರ್ನಲ್ಲಿ (ಎಸ್ಕೆಐಸಿಸಿ) ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಒಮರ್ ಮತ್ತು ಅವರ ಮಂತ್ರಿಗಳಿಗೆ ಪ್ರಮಾಣ ವಚನ ಬೋಧಿಸಿದರು.
2019 ರಲ್ಲಿ ಆರ್ಟಿಕಲ್ 370 ರದ್ದತಿ ಮತ್ತು ಹಿಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಒಮರ್ ಜಮ್ಮು ಮತ್ತು ಕಾಶ್ಮೀರದ ಮೊದಲ ಮುಖ್ಯಮಂತ್ರಿಯಾಗಿದ್ದಾರೆ.
ತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಒಮರ್ ಅಬ್ದುಲ್ಲಾ ಅವರ ಪಕ್ಷದ ನ್ಯಾಷನಲ್ ಕಾನ್ಫರೆನ್ಸ್ 95 ಸ್ಥಾನಗಳಲ್ಲಿ 42 ಸ್ಥಾನಗಳನ್ನು ಗೆದ್ದಿದೆ. ಆದರೆ ಅದರ ಮಿತ್ರಪಕ್ಷ ಕಾಂಗ್ರೆಸ್ 6 ಸ್ಥಾನಗಳನ್ನು ಪಡೆದಿದೆ. ಈ ಮೂಲಕ ಬಹುಮತದ ಗಡಿ ದಾಟಿ ಒಮರ್ ಅಬ್ದುಲ್ಲಾ ಮುಖ್ಯಮಂತ್ರಿಯಾಗುವ ಹಾದಿ ಸುಗಮವಾಯಿತು.
ಒಮರ್ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬುಧವಾರ ಶ್ರೀನಗರಕ್ಕೆ ಆಗಮಿಸಿದ್ದಾರೆ. ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬಿಜೆಪಿಯ ಮಾಜಿ ನಾಯಕ ಉಪಮುಖ್ಯಮಂತ್ರಿ :
ಜಮ್ಮು-ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಬಿಜೆಪಿಯ ಮಾಜಿ ನಾಯಕ ಸುರೇಂದ್ರ ಚೌಧರಿಗೆ ತಮ್ಮ ಸಂಪುಟದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡಿದ್ದಾರೆ. ಸುರೇಂದ್ರ ಚೌಧರಿ ಜಮ್ಮುವಿನ ನೌಶೇರಾದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ.
ನೌಶೇರಾದಿಂದ ಬಿಜೆಪಿಯ ಜಮ್ಮು-ಕಾಶ್ಮೀರದ ಅಧ್ಯಕ್ಷ ರವೀಂದರ್ ರೈನಾ ಅವರನ್ನು 7,819 ಮತಗಳಿಂದ ಸೋಲಿಸಿದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಮತ್ತು ಭಾರತೀಯ ಜನತಾ ಪಾರ್ಟಿಯ ಮಾಜಿ ಸದಸ್ಯ ಚೌಧರಿ ಅವರನ್ನು ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ,
ಒಮರ್ ಅಬ್ದುಲ್ಲಾ ಹಿನ್ನಲೆ :
ಒಮರ್ 10 ಮಾರ್ಚ್ 1970 ರಂದು ಬ್ರಿಟನ್ನ ರೋಚ್ಫೋರ್ಡ್ನಲ್ಲಿ ಜನಿಸಿದರು. ಅವರ ಆರಂಭಿಕ ಶಿಕ್ಷಣ ಶ್ರೀನಗರದ ಬರ್ಂಟ್ ಹಾಲ್ ಶಾಲೆಯಿಂದ ನಂತರ ಹಿಮಾಚಲ ಪ್ರದೇಶದ ಪ್ರಸಿದ್ಧ ಲಾರೆನ್ಸ್ ಶಾಲೆ ಬಂದಿತು. ಇದರ ನಂತರ ಅವರು ಮುಂಬೈನ ಸಿಡೆನ್ಹ್ಯಾಮ್ ಕಾಲೇಜಿನಲ್ಲಿ ಪದವಿ ಪಡೆದರು. ಒಮರ್ ಅವರು ತಮ್ಮ ಪದವಿ ದಿನಗಳಲ್ಲಿ ಶರದ್ ಪವಾರ್ ಅವರ ಮನೆಯಲ್ಲಿಯೇ ಇರುತ್ತಿದ್ದರು. ಪದವಿಯ ನಂತರ, ಅವರು ಸ್ಕಾಟ್ಲೆಂಡ್ನ ಸ್ಟ್ರಾಥ್ಕ್ಲೈಟ್ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪಡೆದರು. ಅಧ್ಯಯನದ ನಂತರ, ಅವರು ಸ್ವಲ್ಪ ಕಾಲ ಕೆಲಸ ಮಾಡಿದರು. ನಂತರ ತಮ್ಮ ಕುಟುಂಬದ ಪರಂಪರೆಯನ್ನು ಮುಂದಿಟ್ಟುಕೊಂಡು ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟರು.
ಒಮರ್ ಅಬ್ದುಲ್ಲಾ ಅವರು 1998 ರಲ್ಲಿ ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸಿದರು ಮತ್ತು ಲೋಕಸಭೆ ಚುನಾವಣೆಯಲ್ಲಿ ಗೆದ್ದರು. ಇದಾದ ನಂತರ 1999ರಲ್ಲಿ ಮತ್ತೆ ಸಂಸದರಾಗಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಖಾತೆ ರಾಜ್ಯ ಸಚಿವ ಸ್ಥಾನ ಪಡೆದರು. 2001 ರಲ್ಲಿ, ಅವರು ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವರಾದರು. 2005 ರ ಹೊತ್ತಿಗೆ, ಒಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದ ರಾಜಕೀಯದ ಮೇಲೆ ತಮ್ಮ ಗಮನವನ್ನು ಕೇಂದ್ರೀಕರಿಸಿದರು ಮತ್ತು ನಂತರ 2009 ರಲ್ಲಿ ರಾಜ್ಯದ ಮುಖ್ಯಮಂತ್ರಿಯಾದರು. ಆ ಸಮಯದಲ್ಲಿ ಅವರು ಸಿಎಂ ಆದ ಅತ್ಯಂತ ಕಿರಿಯ ವ್ಯಕ್ತಿ.

