ಹೈದರಾಬಾದ್ : ಆಂಧ್ರಪ್ರದೇಶದ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಅವರ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ನಾಯಕರೊಬ್ಬರನ್ನು ರಸ್ತೆಯಲ್ಲಿಯೇ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಜನದಟ್ಟಣೆಯ ನಡುವೆಯೇ ನಡೆದಿರುವ ಈ ಭೀಕರ ಕೊಲೆ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ ಯುವ ಘಟಕದ ಸದಸ್ಯ ಶೇಖ್ ರಶೀದ್ ಎಂಬಾತನ ಮೇಲೆ ಹಲ್ಲೆಗೊಳ ಗಾದ ಶೇಖ್ ಜಿಲಾನಿ ಮಚ್ಚಿನಿಂದ ಅಮಾನುಷವಾಗಿ ಹಲ್ಲೆ ನಡೆಸಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಯುವಕನೊಬ್ಬ ಮಚ್ಚಿನಿಂದ ಹಲ್ಲೆ ನಡೆಸುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತ ವ್ಯಕ್ತಿಯನ್ನು ರಶೀದ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ವ್ಯಕ್ತಿಯ ಎರಡೂ ಕೈಗಳು ತುಂಡಾಗಿದ್ದು, ಕುತ್ತಿಗೆಗೆ ಆಳವಾದ ಗಾಯವಾಗಿದೆ.
ಹಲ್ಲೆ ನಡೆಯುತ್ತಿದ್ದಂತೆ ವ್ಯಕ್ತಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ವೈಯಕ್ತಿಕ ದ್ವೇಷವೇ ಈ ಭೀಕರ ಹತ್ಯೆಗೆ ಕಾರಣ ಎಂಬುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಪಕ್ಷಕ್ಕೂ ಈ ಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ಕೂಡ ಪೊಲೀಸರು ಹೇಳಿದ್ದಾರೆ.
ಘಟನೆಗೆ ಪ್ರತಿಕ್ರಿಯೆಯಾಗಿ, ಘಟನೆ ನಡೆದ ವಿನುಕೊಂಡ ಪಟ್ಟಣದಾದ್ಯಂತ ಕಟ್ಟುನಿಟ್ಟಾದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಶಾಂತಿಯನ್ನು ಪ್ರಚೋದಿಸುವ ಅಥವಾ ಶಾಂತಿ ಕದಡುವ ಯಾವುದೇ ಪ್ರಯತ್ನಗಳು ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಪೊಲೀಸ್ ಮುಖ್ಯಸ್ಥರು ಎಚ್ಚರಿಕೆ ನೀಡಿದ್ದಾರೆ.

