‘‘ನಾವು ಭಾರತದೊಂದಿಗೆ ಶಾಂತಿ ಮಾತುಕತೆಗೆ ಸಿದ್ಧರಿದ್ದೇವೆ’’ : ಪಾಕ್ ಪ್ರಧಾನಿ
ಇಸ್ಲಾಮಾಬಾದ್: ‘‘ನಾವು ಭಾರತದೊಂದಿಗೆ ಶಾಂತಿ ಮಾತುಕತೆಗೆ ಸಿದ್ಧರಿದ್ದೇವೆ’’ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ. ಭಾರತದೊಂದಿಗಿನ ಸಂಘರ್ಷದಲ್ಲಿ ಭಾಗಿಯಾಗಿದ್ದ ಅಧಿಕಾರಿಗಳು ಹಾಗೂ ಸೈನಿಕರನ್ನು ಪಂಜಾಬ್ ಪ್ರಾಂತ್ಯದ ಕಮ್ರಾ ವಾಯುನೆಲೆಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು ಈ ಸಂದರ್ಭದಲ್ಲಿ ಭಾರತದೊಂದಿಗೆ ಮಾತುಕತೆಗೆ ಸಿದ್ಧ ಎಂದು ಹೇಳಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಮೇ 6 ಮತ್ತು 7 ರ ಮಧ್ಯರಾತ್ರಿ ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಒಂಬತ್ತು ಭಯೋತ್ಪಾದಕ ತಾಣಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ದಾಳಿಯಲ್ಲಿ 100 ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.
ನಂತರ ಪಾಕಿಸ್ತಾನವು ಮೇ 8, 9 ಮತ್ತು 10 ರಂದು ಹಲವಾರು ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು. ಭಾರತೀಯ ಸಶಸ್ತ್ರ ಪಡೆಗಳು ರಫೀಕಿ, ಮುರಿಯದ್, ಚಕ್ಲಾಲಾ, ರಹೀಮ್ ಯಾರ್ ಖಾನ್, ಸುಕ್ಕೂರ್ ಮತ್ತು ಚುನಿಯನ್ ಸೇರಿದಂತೆ ಹಲವಾರು ಪಾಕಿಸ್ತಾನಿ ಮಿಲಿಟರಿ ಸ್ಥಾಪನೆಗಳ ಮೇಲೆ ಭೀಕರ ಪ್ರತಿದಾಳಿ ನಡೆಸಿದವು.
ಬುಧವಾರ, ಶೆಹಬಾಜ್ ಸಿಯಾಲ್ಕೋಟ್ನ ಪಸ್ರೂರ್ ಕಂಟೋನ್ಮೆಂಟ್ಗೆ ಭೇಟಿ ನೀಡಿದ್ದರು, ಅಲ್ಲಿ ಅವರು ಸೈನಿಕರೊಂದಿಗೆ ಸಂವಾದ ನಡೆಸಿದ್ದರು. ಈ ಮೋದಲು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳು ಯಾವಾಗಲೂ ಅದರ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗಗಳಾಗಿರುತ್ತವೆ ಎಂದು ಭಾರತ ಸಮರ್ಥಿಸಿಕೊಂಡಿತ್ತು.
ಭಾರತ ಮತ್ತು ಪಾಕಿಸ್ತಾನ ಮೇ 10 ರಂದು ಡಿಜಿಎಂಒ ಮಟ್ಟದ ಮಾತುಕತೆಯಲ್ಲಿ ಯುದ್ಧವನ್ನು ಕೊನೆಗೊಳಿಸಲು ಒಪ್ಪಿಕೊಂಡಿದ್ದವು. ಈಗ ಎರಡೂ ದೇಶಗಳು ವಿಶ್ವಾಸ ವೃದ್ಧಿ ಕ್ರಮಗಳನ್ನು ಮುಂದುವರಿಸಲು ನಿರ್ಧರಿಸಿವೆ. ಮಾಹಿತಿಯ ಪ್ರಕಾರ, ಯುದ್ಧವನ್ನು ಕೊನೆಗೊಳಿಸುವ ಕುರಿತು ಎರಡೂ ದೇಶಗಳ ನಡುವೆ ಮಾಡಿಕೊಂಡ ಒಪ್ಪಂದವನ್ನು ಮೇ 18 ರವರೆಗೆ ವಿಸ್ತರಿಸಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿದೆ.

