ಬೆಂಗಳೂರು: ಖಗೋಳ ಕೌತುಕಕ್ಕೆ ನಭೋ ಮಂಡಲ ಸಾಕ್ಷಿ ಆಗಿದೆ. ಆಗಸದಲ್ಲಿ ಹಾಲ್ಬೆಳದಿಂಗಳಂತೆ ಕಾಣುತ್ತಿದ್ದ ಚಂದಿರನಿಗೆ ರಾತ್ರಿ ಗ್ರಹಣ ಹಿಡಿದಿತ್ತು.ಸರಿಯಾಗಿ 9 ಗಂಟೆ 57 ನಿಮಿಷಕ್ಕೆ ಗ್ರಹಣ ಶುರುವಾಯಿತು. ಬಾನಂಗಳದಲ್ಲಿ ಚಂದಿರ ಗ್ರಹಣದಿಂದ ಬಂಧಿ ಆಗಿದ್ದ. ಸೂರ್ಯ ಮತ್ತು ಚಂದ್ರನ ನಡುವೆ ಭೂಮಿ ಬಂದಾಗ ಚಂದ್ರಗ್ರಹಣ ಸಂಭವಿಸುತ್ತದೆ. ಅದೇ ರೀತಿ ಚಂದ್ರನ ಹೆಚ್ಚಿನ ಭಾಗ ಭೂಮಿಯ ನೆರಳು ಆವರಿಸಿದಾಗ ಚಂದ್ರ ಕೆಂಪು ಬಣ್ಣದಲ್ಲಿ ಕಾಣಿಸಿದ. ವರ್ಷದ 2ನೇ ಮತ್ತು ಕೊನೆಯ ಚಂದ್ರಗ್ರಹಣಕ್ಕೆ ಇಡೀ ವಿಶ್ವ ಸಾಕ್ಷಿಯಾಗಿತು.
ರಾತ್ರಿ 9 ಗಂಟೆ 57 ನಿಮಿಷಕ್ಕೆ ಸರಿಯಾಗಿ ಆರಂಭವಾದ ಚಂದ್ರಗ್ರಹಣ ಮೊದಲು ಗೋಚರಿಸಿದ್ದು ಸೈಪ್ರಸ್ನಲ್ಲಿ. ಭಾರತದಲ್ಲಿ ಮೊದಲ ಗೋಚರಿಸಿದ್ದು ಲಡಾಖ್ನಲ್ಲಿ. ಟರ್ಕಿ, ಸೈಪ್ರಸ್, ಇಂಡೋನೇಷ್ಯಾದ ಜಕಾರ್ತ, ಆಸ್ಟ್ರೇಲಿಯಾ ಸಿಡ್ನಿ, ಚೀನಾದ ಬೀಜಿಂಗ್, ದುಬೈನಲ್ಲಿ ಶ್ವೇತ ವರ್ಣದ ಚಂದಿರ ಕೆಂಬಣ್ಣದಲ್ಲಿ ಗೋಚರಿಸಿತು.
ಇನ್ನೂ ಬೆಂಗಳೂರಿನಲ್ಲಿ ಆರಂಭದ ಒಂದು ಗಂಟೆ ಕಳೆದರೂ ಮೋಡದ ಮರೆಯಲ್ಲಿ ಆಟವಾಡುತ್ತಿದ್ದ ಚಂದಿರ ಬಳಿಕ ಕಿತ್ತಳೆ ಬಣ್ಣ, ನಂತರ ರಕ್ತ ರೂಪಕ್ಕೆ ತಿರುಗಿದ. ಬೆಂಗಳೂರಿನ ನೆಹರೂ ತಾರಾಲಯದಲ್ಲಿ ಚಂದ್ರಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಮಕ್ಕಳು, ವಯೋವೃದ್ಧರು, ಕುಟುಂಬ ಸಮೇತ ಆಗಮಿಸಿ ತಾರಾಲಯದಲ್ಲಿ ಕಣ್ತುಂಬಿಕೊಂಡರು. 4 ಟೆಲಿಸ್ಕೋಪ್, 1 ಎಲ್ಸಿಡಿ ವ್ಯವಸ್ಥೆ ಮಾಡಲಾಗಿತ್ತು. ಮತ್ತೊಂದ್ಕಡೆ ಕೋರಮಂಗಲದ ಭಾರತೀಯ ಖಗೋಳ ಭೌತ ವಿಜ್ಞಾನ ಸಂಸ್ಥೆಯಲ್ಲೂ ಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ನೂರಾರು ಜನರು ಗ್ರಹಣ ವೀಕ್ಷಣೆ ಮಾಡಿ ಖಗೋಳ ಕೌತುಕ ಕಣ್ತುಂಬಿಕೊಂಡರು.
ಅಲ್ಲದೇ ರಾಜ್ಯದ ವಿವಿಧೆಡೆ ಆಕಾಶದಲ್ಲಿ ಹುಣ್ಣಿಮೆ ಚಂದಿರನೊಡನೆ ನೆರಳು ಬೆಳಕಿನ ಆಟ ನಡೆದಿತ್ತು. ಬಾನಂಗಳ ಬೆಳಗುವ ಚಂದ್ರನನ್ನು ಭೂಮಿಯ ನೆರಳು ಆವರಿಸಿತ್ತು. ರಾತ್ರಿ 11 ಗಂಟೆ ಸುಮಾರಿಗೆ ಚಂದ್ರಗ್ರಹಣ ಉತ್ತುಂಗ ಸ್ಥಿತಿ ತಲುಪಿತ್ತು. ಆಗಸದಲ್ಲಿ ಚಂದ್ರ ರಕ್ತರೂಪಿಯಾಗಿ ಕಂಗೊಳಿಸಿದ. ಭಾರತ ಸೇರಿದಂತೆ ವಿಶ್ವದ ಹಲವೆಡೆ ಚಂದ್ರ ಗ್ರಹಣವನ್ನು ಜನರು ಕಣ್ತುಂಬಿಕೊಂಡರು.

