ನವದೆಹಲಿ, ಮಾ.23: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಇರಾನ್–ಇಸ್ರೇಲ್ ಉದ್ವಿಗ್ನತೆ ಹಾಗೂ ಹಾರ್ಮೊಜ್ ಜಲಸಂಧಿಯ ಬಿಕ್ಕಟ್ಟಿನ ನಡುವೆಯೂ ಭಾರತ ಇಂಧನದ ದೃಷ್ಟಿಯಿಂದ ಸುರಕ್ಷಿತವಾಗಿದೆ ಎಂದು ಪ್ರಧಾನಿ Narendra Modi ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಅವರು, ಬಿಕ್ಕಟ್ಟಿನ ಸಮಯದಲ್ಲಿ ದೇಶದ ಅಗತ್ಯಗಳನ್ನು ಪೂರೈಸಲು ಭಾರತವು ಕಳೆದ ದಶಕದಲ್ಲಿ ಕಚ್ಚಾ ತೈಲ ಸಂಗ್ರಹಣೆಗೆ ಹೆಚ್ಚಿನ ಆದ್ಯತೆ ನೀಡಿದೆ ಎಂದರು. ಪ್ರಸ್ತುತ ದೇಶದಲ್ಲಿ 53 ಲಕ್ಷ ಮೆಟ್ರಿಕ್ ಟನ್ಗಳಿಗಿಂತ ಹೆಚ್ಚು ಕಾರ್ಯತಂತ್ರದ ಪೆಟ್ರೋಲಿಯಂ ನಿಕ್ಷೇಪವಿದ್ದು, 65 ಲಕ್ಷ ಮೆಟ್ರಿಕ್ ಟನ್ಗಳಿಗಿಂತ ಹೆಚ್ಚು ಸಂಗ್ರಹಣೆ ಸಾಮರ್ಥ್ಯವನ್ನು ನಿರ್ಮಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.
ಇಂಧನ ಆಮದು ಮೂಲಗಳನ್ನು ವೈವಿಧ್ಯಗೊಳಿಸಿರುವುದರಿಂದ ಭಾರತ ಬಿಕ್ಕಟ್ಟಿನ ಪರಿಣಾಮವನ್ನು ಸಮರ್ಥವಾಗಿ ಎದುರಿಸುತ್ತಿದೆ ಎಂದು ಅವರು ಹೇಳಿದರು. “ಹಿಂದೆ ನಾವು 27 ದೇಶಗಳಿಂದ ಇಂಧನ ಆಮದು ಮಾಡಿಕೊಳ್ಳುತ್ತಿದ್ದೆವು, ಈಗ ಅದು 41 ದೇಶಗಳಿಗೆ ವಿಸ್ತರಿಸಲಾಗಿದೆ. ಇದು ಪೂರೈಕೆ ವ್ಯತ್ಯಯವನ್ನು ತಡೆಯಲು ಸಹಕಾರಿಯಾಗಿದೆ,” ಎಂದು ವಿವರಿಸಿದರು.
ಇದೇ ವೇಳೆ, ಜಾಗತಿಕ ಪಾಲುದಾರರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ತೈಲ ಮತ್ತು ಅನಿಲ ಪೂರೈಕೆ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರಧಾನಿ ತಿಳಿಸಿದರು. ಹಾರ್ಮೊಜ್ ಜಲಸಂಧಿಯ ಮೂಲಕ ಕಚ್ಚಾ ತೈಲ, ಅನಿಲ ಹಾಗೂ ರಸಗೊಬ್ಬರಗಳ ಸಾಗಣೆ ನಡೆಯುತ್ತಿರುವುದರಿಂದ ಆ ಮಾರ್ಗದಲ್ಲಿ ಸಮಸ್ಯೆ ಉಂಟಾದರೂ ದೇಶದ ಅಗತ್ಯಗಳನ್ನು ಪೂರೈಸಲು ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದರು.
ಎಲ್ಪಿಜಿ ಕೊರತೆ ಕುರಿತೂ ಮಾತನಾಡಿದ ಪ್ರಧಾನಿ, ಗೃಹ ಬಳಕೆಯ ಅಗತ್ಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು. “ಭಾರತವು ಶೇ.60 ರಷ್ಟು ಎಲ್ಪಿಜಿಯನ್ನು ಆಮದು ಮಾಡಿಕೊಳ್ಳುತ್ತದೆ. ಆದ್ದರಿಂದ ಮನೆ ಬಳಕೆದಾರರ ಅಗತ್ಯಗಳನ್ನು ಪೂರೈಸುವುದು ನಮ್ಮ ಮೊದಲ ಆದ್ಯತೆ,” ಎಂದು ಅವರು ಸ್ಪಷ್ಟಪಡಿಸಿದರು.

