ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತದ ಮಿಲಿಟರಿ ಪ್ರತಿಕ್ರಿಯೆಯ ವಿಧಾನ, ಗುರಿ ಮತ್ತು ಸಮಯವನ್ನು ನಿರ್ಧರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ.
ಇಂದು ಮೋದಿ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಸಿಡಿಎಸ್ ಜನರಲ್ ಅನಿಲ್ ಚೌಹಾಣ್, ಭೂಸೇನೆ, ವಾಯುಸೇನೆ, ನೌಕಾಸೇನೆಯ ಮುಖ್ಯಸ್ಥರ ಜೊತೆ ಸಭೆ ನಡೆಸಿದರು.
ಭಯೋತ್ಪಾದನೆಯನ್ನು ಸಂಪೂರ್ಣ ತೊಡೆದು ಹಾಕುವುದು ನಮ್ಮ ರಾಷ್ಟ್ರೀಯ ಸಂಕಲ್ಪ. ಭಾರತೀಯ ಸೇನೆಯ ವೃತ್ತಿಪರ ಸಾಮರ್ಥ್ಯದ ಬಗ್ಗೆ ನನಗೆ ಸಂಪೂರ್ಣ ನಂಬಿಕೆ ಮತ್ತು ವಿಶ್ವಾಸವಿದೆ ಎಂದು ಹೇಳಿದರು.
ತಿಂಗಳ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನ 121 ನೇ ಸಂಚಿಕೆಯಲ್ಲಿ ಮಾತನಾಡಿದ ಮೋದಿ, ಪಹಲ್ಗಾಮ್ ದಾಳಿಯ ಸಂತ್ರಸ್ತರು ದುಃಖಿಸುತ್ತಿರುವ ದೃಶ್ಯಗಳನ್ನು ನೋಡಿದರೆ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು.
ಪಹಲ್ಗಾಮ್ ದಾಳಿಯಿಂದ ನನಗೆ ತುಂಬಾ ನೋವಾಗಿದೆ. ಇದು ಭಯೋತ್ಪಾದನೆಯ ಬೆಂಬಲಿಗರ ಹತಾಶೆ ಅವರ ಹೇಡಿತನವನ್ನು ತೋರಿಸುತ್ತದೆ. ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಸಿಗಲಿದೆ. ಅಪರಾಧ ಎಸಗಿದವರಿಗೆ, ಬೆಂಬಲಿಗರಿಗೆ, ಸೂತ್ರಧಾರಿಗಳವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗುಡುಗಿದ್ದರು.

