ಬೆಂಗಳೂರು: ಬಹುನಿರೀಕ್ಷಿತ ಪೊಲೀಸ್ ಸಬ್ ಇನ್ಸ್ಪೆಕ್ಟರ್ (402) ಹುದ್ದೆಗಳ ನೇಮಕಾತಿಗೆ ಅಕ್ಟೋಬರ್ 3ರಂದು ಕ್ಯಾಮರಾ ಕಣ್ಗಾವಲಿನಲ್ಲಿ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವ್ಯಾಪಕ ಸಿದ್ಧತೆಗಳನ್ನು ಮಾಡಿಕೊಂಡಿದೆ.
ʼಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲ್ಬುರ್ಗಿ, ಧಾರವಾಡ ಮತ್ತು ದಾವಣಗೆರೆ ನಗರಗಳ ಒಟ್ಟು 163 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಅಂದರೆ 21,875 ಮಂದಿ ಸೇರಿದಂತೆ ಒಟ್ಟು 66,990 ಮಂದಿ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅರ್ಹರಾಗಿದ್ದಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪರೀಕ್ಷಾ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷೆ ಆರಂಭಕ್ಕೆ ಅರ್ಧ ಗಂಟೆ ಮೊದಲು ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಕಡ್ಡಾಯವಾಗಿ ಇರಬೇಕು. ಹೀಗಾಗಿ ಅಭ್ಯರ್ಥಿಗಳು ಬೇಗ ಬಂದು ಪೊಲೀಸರ ತಪಾಸಣೆಗೆ ಒಳಪಡಬೇಕು. ತಡವಾಗಿ ಬರುವವರಿಗೆ ಪ್ರವೇಶ ಇರುವುದಿಲ್ಲ. ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ಎಚ್ಚರಿಸಿದ್ದಾರೆ.
ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲೂ ಕ್ಯಾಮರಾ ಅಳವಡಿಸಿದ್ದು, ವೆಬ್ ಕಾಸ್ಟಿಂಗ್ ಮೂಲಕ ಅಲ್ಲಿನ ಎಲ್ಲ ಬೆಳವಣಿಗೆಗಳನ್ನು ವೀಕ್ಷಿಸುವ ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರತಿ ಕೇಂದ್ರದಲ್ಲೂ ಜಾಮರ್ ಅಳವಡಿಸಲು ಕ್ರಮ ತೆಗೆದುಕೊಂಡಿದ್ದು, ಆಸುಪಾಸಿನಲ್ಲಿ ಬ್ಲೂಟೂಥ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳು ಕಾರ್ಯನಿರ್ವಹಿಸದಂತೆ ಮಾಡಲಾಗಿದೆ ಎಂದು ಅವರು ಹೇಳಿದರು.
ಕಮಾಂಡ್ ಸೆಂಟರ್:
ಬೆಂಗಳೂರಿನ ಕೆಇಎ ಕಚೇರಿಯಲ್ಲಿ ರಾಜ್ಯ ಮಟ್ಟದ ಕಮಾಂಡ್ ಸೆಂಟರ್ ಸ್ಥಾಪಿಸಿದ್ದು, ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲಿ ಆಗುವ ಬೆಳವಣಿಗೆಗಳನ್ನು ಗಮನಿಸಲು ಟಿವಿಗಳನ್ನು ಅಳವಡಿಸಲಾಗಿದೆ. ಅದೇ ರೀತಿ ಜಿಲ್ಲಾ ಮಟ್ಟದಲ್ಲಿ ಕೂಡ ಒಂದು ನಿಯಂತ್ರಣ ಕೊಠಡಿ ಕಾರ್ಯನಿರ್ವಹಿಸಲಿದೆ ಎಂದು ಅವರು ವಿವರಿಸಿದರು.
ಪ್ರಶ್ನೆ ಪತ್ರಿಕೆ ಸ್ವೀಕಾರ ಮತ್ತು ಅದರ ಬಂಡಲ್ ತೆರೆಯುವ ಎಲ್ಲ ಪ್ರಕ್ರಿಯೆಯನ್ನೂ ವೆಬ್ ಕಾಸ್ಟಿಂಗ್ ಮಾಡಲಾಗುತ್ತದೆ. ಅಲ್ಲದೆ, ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಸಂದರ್ಭದಲ್ಲಿ ಅವರ ಬೆರಳಚ್ಚು ಮತ್ತು ಭಾವಚಿತ್ರವನ್ನು ತೆಗೆದುಕೊಂಡು ಅಲ್ಲೇ ಅದನ್ನು ಅವರು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಗತ್ತಿಸಿರುವ ಚಿತ್ರದ ಜತೆಗೂ ಆನ್ ಲೈನ್ ನಲ್ಲಿ ಹೊಂದಾಣಿಕೆ ಮಾಡುವ ವ್ಯವಸ್ಥೆ ಮಾಡಲಾಗಿದೆ.
ಹೀಗೆ ಮಾಡುವುದರಿಂದ ಯಾರದೊ ಹೆಸರಿನಲ್ಲಿ ಇನ್ಯಾರೊ ಪರೀಕ್ಷೆ ಬರೆಯುವುದನ್ನು ತಡೆಯಬಹುದು ಎಂದು ಹೇಳಿದರು.ಬೇರೆ ಜಿಲ್ಲೆಗಳ ವಿಶೇಷ ವೀಕ್ಷಕರನ್ನೂ ನಿಯೋಜಿಸಿದ್ದು, ಅವರು ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ನಿಗಾ ಇಡಲಿದ್ದಾರೆ ಎಂದು ಅವರು ವಿವರಿಸಿದರು.
ಇಎನ್ ಟಿ ವೈದ್ಯರ ನಿಯೋಜನೆ:
ಹಿಂದೆಲ್ಲ ಪರೀಕ್ಷೆ ನಡೆದಾಗ ಕಿವಿಯೊಳಗೆ ಅತಿ ಸೂಕ್ಷ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ಇಟ್ಟುಕೊಂಡು ಬಂದು ಪರೀಕ್ಷೆಯಲ್ಲಿ ಅಕ್ರಮ ಎಸಗಲು ಪ್ರಯತ್ನಿಸಿದ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಒಬ್ಬ ಇಎನ್ ಟಿ ವೈದ್ಯರನ್ನು ನಿಯೋಜಿಸಿದ್ದು, ಅವರು ಕೂಡ ನಿಗಾ ಇಡಲಿದ್ದಾರೆ ಎಂದು ಅವರು ಹೇಳಿದರು.
ವಿಡಿಯೊ ಕಾನ್ಫರೆನ್ಸ್:
ಪರೀಕ್ಷೆ ನಡೆಯುವ ಆರೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ವಿಡಿಯೊ ಸಂವಾದ ನಡೆಸಿ ಬಿಗಿ ಕ್ರಮಗಳ ಬಗ್ಗೆ ವಿವರಿಸಲಾಗಿದೆ ಎಂದು ಅವರು ವಿವರಿಸಿದರು.

