ಮಂಗಳೂರು : ಹೆಬ್ಬಾವಿನ ಮರಿ ಮಾರಾಟ ಜಾಲವೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಪತ್ತೆ ಹಚ್ಚಿ ಅಪ್ರಾಪ್ತ ಬಾಲಕ ಸೇರಿದಂತೆ ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಮಂಗಳೂರಿನ ಬಡಗ ಉಳಿಪ್ಪಾಡಿ ನಿವಾಸಿ ವಿಹಾಲ್ ಎಚ್. ಶೆಟ್ಟಿ (18), ಸ್ಟೇಟ್ ಬ್ಯಾಂಕ್ ಬಳಿಯ ಸಾಕುಪ್ರಾಣಿ ಅಂಗಡಿ ಮಾಲಕ ಉಳ್ಳಾಲ ಮುನ್ನೂರು ಗ್ರಾಮದ ಇಬ್ರಾಹೀಂ ಶಕೀಲ್ ಇಸ್ಮಾಯಿಲ್ (35), ಅಂಗಡಿ ಸಿಬಂದಿ ಉಳ್ಳಾಲ ಹರೇಕಳ ಗ್ರಾಮದ ಮಹಮ್ಮದ್ ಮುಸ್ತಫಾ (22) ಮತ್ತು ಮಂಗಳೂರಿನ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿ 16 ವರ್ಷದ ಬಾಲಕ ಬಂಧಿತರು.
ಮಂಗಳೂರು ರೇಂಜ್ ಫಾರೆಸ್ಟ್ ಆಫೀಸರ್ ರಾಜೇಶ್ ಬಾಳಿಗಾರ್ ನೇತೃತ್ವದ ಅರಣ್ಯ ಇಲಾಖೆಯ ತಂಡವು ಈ ಕಾರ್ಯಾಚರಣೆಯನ್ನು ನಡೆಸಿತು. ಆರಂಭದಲ್ಲಿ, ಹೆಬ್ಬಾವು ಖರೀದಿಸುವ ನೆಪದಲ್ಲಿ ತಂಡವು ವಿಹಾಲ್ ಅವರನ್ನು ಸಂಪರ್ಕಿಸಿತು. ಕದ್ರಿಯ ಅಶ್ವಥ್ ಕಟ್ಟೆ ಬಳಿ ಸಭೆ ಏರ್ಪಡಿಸಲಾಗಿತ್ತು, ಅಲ್ಲಿ ವಿಹಾಲ್ ಹಾವನ್ನು 45,000 ರೂ.ಗೆ ಮಾರಾಟ ಮಾಡಲು ಒಪ್ಪಿಕೊಂಡರು ಮತ್ತು ಖರೀದಿದಾರರಿಗೆ ಹಾವನ್ನು ತೋರಿಸಿದರು. ಈ ಹಂತದಲ್ಲಿ, ಅರಣ್ಯ ಅಧಿಕಾರಿಗಳು ಅವನನ್ನು ವಶಕ್ಕೆ ಪಡೆದರು.
ವನ್ಯಜೀವಿ ಸಂರಕ್ಷಣ ಕಾಯ್ದೆ 1972ರ ಅನುಸೂಚಿತ (ಶೆಡ್ಯೂಲ್ 1) ಭಾಗ ಸಿ ಯಡಿ ಪ್ರಾಣಿಯಾದ ಇಂಡಿಯನ್ ರಾಕ್ ಪೈಥಾನ್ (ಹೆಬ್ಬಾವು)ಅನ್ನು ಹೊರ ದೇಶ ಅಂದರೆ ಬರ್ಮಿಸ್ ಬಾಲ್ ಪೈಥಾನ್ ಎಂದು ಮಾರಾಟ ಮಾರಾಟ ಮಾಡುತ್ತಿದ್ದರು. ವನ್ಯ ಜೀವಿ ಸಂರಕ್ಷಣ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದನ್ನು ಕೆಲವರು ಮನೆಯಲ್ಲಿ ಸಾಕುವ ಉದ್ದೇಶದಿಂದ ಖರೀದಿಸುತ್ತಿದ್ದರು.
ಈ ಜಾಲಕ್ಕೆ ತಮಿಳುನಾಡು ವರೆಗೆ ಸಂಪರ್ಕವಿರುವುದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟನಿ ಮರಿಯಪ್ಪ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜೆ. ಕ್ಲಿಫರ್ಡ್ ಲೋಬೊ ಅವರ ನಿರ್ದೇಶನದಂತೆ ಮುಂದಿನ ತನಿಖೆ ನಡೆಯಲಿದೆ.

