ಬೆಂಗಳೂರು : ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಯ ದೃಷ್ಟಿಯಿಂದ, ಮೂಡಾ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು, ಆರೋಪಿಗಳು ಹಾಗೂ ಸಂಭವನೀಯ ಸಾಕ್ಷಿದರರ ಪಾಸ್ ಪೋರ್ಟ್ ಗಳನ್ನು ಈ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಇ.ಡಿ ಹಾಗೂ ರಾಜ್ಯ ಪೋಲಿಸ್ ಮಹಾ ನಿದೇರ್ಶಕರಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್ ಆಶೋಕ್ ಅವರು ಮನವಿ ಮಾಡಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಇಡಿ ತನಿಖೆ ಇಷ್ಟೊಂದು ಚುರುಕುಗೊಂಡಿರುವ ಪರಿಸ್ಥಿತಿಯಲ್ಲಿ ಇಡೀ ಪ್ರಕರಣ ಮತ್ತೊಂದು ಮಜಲು ತಲುಪಿದಂತಾಗಿದೆ. ಅಧಿಕಾರದ ಅತ್ಯುನ್ನತ ಸ್ಥಾನದಲ್ಲಿರುವವರು, ಅವರ ಕುಟುಂಬ ಸದಸ್ಯರು, ಹಿರಿಯ ಅಧಿಕಾರಿಗಳು ಈ ಪ್ರಕರಣದಲ್ಲಿ ಆರೋಪಿಗಳಾಗಿರುವುದರಿಂದ, ಈ ಪ್ರಕರಣ ಎಷ್ಟು ಗಂಭೀರವೋ ಅಷ್ಟೆ ಸೂಕ್ಷ್ಮವೂ ಆಗಿದೆ ಎಂದು ಹೇಳಿದ್ದಾರೆ.
ಮೂಡಾದಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನ ಜಾರಿ ನಿರ್ದೇಶನಾಲಯ ತನಿಖೆ ಮಾಡುತ್ತಿದೆ. ಇ.ಡಿ. ಅಧಿಕಾರಿಗಳು ಮೈಸೂರಿನ ಮೂಡಾ ಕಚೇರಿಗೆ, ತಾಲ್ಲೂಕು ಕಚೇರಿಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನಾ ಕಾರ್ಯ ನಡೆಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಅಶೋಕ್ ತಿಳಿಸಿದ್ದಾರೆ.

