ಬೆಂಗಳೂರು: ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದ ವಿಚಾರಣೆ ಎದುರಿಸುತ್ತಿರುವ ನಟ ದರ್ಶನ್ (Darshan) ಸೇರಿ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾಗಲಿದೆ. ಇಂದು ಆರೋಪಿಗಳನ್ನು ಮತ್ತೆ ಕೋರ್ಟ್ಗೆ ಹಾಜರುಪಡಿಸಲಿದ್ದು, ನಾಲ್ವರಿಗೂ ಜೈಲು ಫಿಕ್ಸ್ ಎನ್ನಲಾಗುತ್ತಿದೆ.
ಆರೋಪಿಗಳಾದ ದರ್ಶನ್, ವಿನಯ್, ಧನರಾಜ್, ಪ್ರದೋಶ್ ಕಸ್ಟಡಿ ಅವಧಿ ಅಂತ್ಯವಾಗಲಿದ್ದು, ಕೋರ್ಟ್ ಮುಂದೆ ಹಾಜರುಪಡಿಸಿ ಪರಪ್ಪನ ಅಗ್ರಹಾರಕ್ಕೆ ಕಳಿಸಲು ಪೊಲೀಸರು ಇಂದು ತಯಾರಿ ನಡೆಸಿದ್ದಾರೆ. ಇವರೆಗೂ ಆರೋಪಿಗಳನ್ನು ಮೂರು ಬಾರಿ ಕಸ್ಟಡಿಗೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಮಧ್ಯಾಹ್ನ 3 ಗಂಟೆಯ ನಂತರ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಿಂದ ಕೋರ್ಟ್ಗೆ ಆರೋಪಿಗಳನ್ನು ಕರೆದೊಯ್ಯಲಾಗುವುದು. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ನಡೆದಿದ್ದ ಪಟ್ಟಣಗೆರೆ ಶೆಡ್ಗೆ ಬೀಗ!
ಜೊತೆಗೆ ನಟ ದರ್ಶನ್ ಮನೆಯಲ್ಲಿ ಸಿಕ್ಕಂತಹ ಹಣದ ಬಗ್ಗೆ ವಿಚಾರಿಸಲು ಎರಡು ದಿನದ ಹಿಂದೆ ಪೊಲೀಸರು, ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಮತ್ತೆ ಕಸ್ಟಡಿಗೆ ತೆಗೆದುಕೊಂಡಿದ್ದರು. ಅಷ್ಟೊಂದು ಹಣ ಎಲ್ಲಿಂದ ಬಂತು? ಯಾವ ಅಕೌಂಟ್ನಿಂದ ಹಣ ಡ್ರಾ ಮಾಡಿದ್ರಿ? ಬೇರೆ ಯಾರಾದ್ರೂ ಹಣ ನೀಡಿದ್ರಾ? ಈ ಹಣಕ್ಕೆ ದಾಖಲೆಗಳು ಇದೆಯಾ? ಅಷ್ಟೊಂದು ಹಣ ಮನೆಯಲ್ಲಿ ಇಡಲು ಕಾರಣ ಏನು? ಹೀಗೆ ಅನೇಕ ಪ್ರಶ್ನೆಗಳನ್ನು ಕೇಳಿ ಪೊಲೀಸರು ಮಾಹಿತಿ ಪಡೆದಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದುವರೆಗೆ 17 ಆರೋಪಿಗಳನ್ನು ಬಂಧಿಸಲಾಗಿದೆ. ಅವರ ಪೈಕಿ 13 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಉಳಿದವರು ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಇದನ್ನೂ ಓದಿ: ಡಿ ಗ್ಯಾಂಗ್ ಕೊಲೆ ಪ್ರಕರಣ- 2 ಹಲ್ಲೆ ವೀಡಿಯೋ ಸಂಗ್ರಹಿಸಿದ ಪೊಲೀಸರು