ಬೆಂಗಳೂರು: ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟ ಡಾ. ವಿಷ್ಣುವರ್ಧನ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು ಮಂಗಳವಾರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಮನವಿ ಮಾಡಿದ್ದಾರೆ.
ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ನನ್ನನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಇದೇ ವೇಳೆ ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರಂನ ರಸ್ತೆಗೆ ನಾಮಕರಣ ಮಾಡುವಂತೆಯೂ ಅವರು ಮನವಿ ಮಾಡಿದರು ಎಂದು ಸಿಎಂ ತಿಳಿಸಿದ್ದಾರೆ.
ವಿಷ್ಣು ಸ್ಮಾರಕಕ್ಕೆ10 ಗುಂಟೆ ಜಮೀನು ಮೀಸಲಿಡಲು ಮನವಿ :
ಬೆಂಗಳೂರು: ನಟ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ 10 ಗುಂಟೆ ಜಾಗ ಮೀಸಲಿಡಬೇಕು ಎಂದು ನಟಿ ಭಾರತಿ ವಿಷ್ಣುವರ್ಧನ್ ಮತ್ತು ಅನಿರುದ್ಧ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.
ಭಾರತಿ ಮತ್ತು ಅನಿರುದ್ಧ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದು, ಅಭಿಮಾನ್ ಸ್ಟುಡಿಯೋ ಈಗ ಸರಕಾರದ ವಶಕ್ಕೆ ಬಂದಿದ್ದು. ವಿಷ್ಣುವರ್ಧನ್ ಅಂತ್ಯಕ್ರಿಯೆ ನಡೆದ ಸ್ಥಳ ಸೇರಿದಂತೆ 10ಗುಂಟೆ ಜಾಗ ಸ್ಮಾರಕಕ್ಕೆ ಬಿಟ್ಟು ಕೊಡಿ. ವಿಷ್ಣುವರ್ಧನ್ ಅವರ ಜನ್ಮದಿನದ ಒಳಗೆ ಸರ್ಕಾರವು ಭೂಮಿ ನೀಡಲು ಒಪ್ಪಿಗೆ ಸೂಚಿಸಬೇಕು. ಜತೆಗೆ ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ಕೋರಿದರು.
ನಂತರ ಸುದ್ದಿಗಾರರ ಜತೆ ಮಾತನಾಡಿದ ಅನಿರುದ್ಧ. ‘ನಮ್ಮ ಬೇಡಿಕೆಯನ್ನು ಪರಿಶೀಲಿಸಿ, ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಅವರು ಹೇಳಿದ್ದಾರೆ. ಸರ್ಕಾರವು ಶೀಘ್ರವೇ ಜಮೀನು ಒದಗಿಸುವ ನಿರೀಕ್ಷೆ ಇದೆ’ ಎಂದರು.

