ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ 414 ನೇ ಮೈಸೂರು ದಸರಾ ಮೆರವಣಿಗೆಯಲ್ಲಿ ಅರ್ಜುನ ಆನೆಯ ಸ್ತಬ್ಧ ಚಿತ್ರ ಪ್ರದರ್ಶಿಸಬೇಕು ಹಾಗೂ ನಮ್ಮ ಅರ್ಜುನ ಗ್ಯಾಲರಿ ಸ್ಥಾಪಿಸಬೇಕೆಂದು ಕೆಎಂಪಿಕೆ ಟ್ರಸ್ಟ್
ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದೆ.
ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ್ ಅಯ್ಯಂಗಾರ್ ನೇತೃತ್ವದಲ್ಲಿ ಡಿಸಿ ಕಚೇರಿಗೆ ತೆರಳಿ ಅಪರ ಜಿಲ್ಲಾಧಿಕಾರಿ ಶಿವರಾಜು ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಯಿತು. ಸತತ 9 ಬಾರಿ ಮೈಸೂರು ದಸರಾ ಮಹೋತ್ಸವದಲ್ಲಿ ಚಿನ್ನದ ಅಂಬಾರಿ ಹೊತ್ತು ಎಲ್ಲರ ಮನಗೆದ್ದ ಅರ್ಜುನ ಆನೆ ಕಳೆದ ವರ್ಷ ಸಕಲೇಶಪುರ ಸಮೀಪ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆಯ ವೇಳೆ ಸಾವನ್ನಪ್ಪಿದೆ.
2019ರಲ್ಲಿ ದಸರಾದಿಂದ ನಿವೃತ್ತಿ ಪಡೆದಿದ್ದ ಅರ್ಜುನ ಕಳೆದ ವರ್ಷದ ದಸರಾದಲ್ಲಿ ನಿಶಾನೆ ಆನೆಯಾಗಿ ಗಜಪಡೆಯನ್ನು ಮುನ್ನಡೆಸಿ ಸೇವೆಸಲ್ಲಿಸಿದೆ.ರಾಜ್ಯ ಸರ್ಕಾರ ಸಕಲೇಶಪುರದ ಅರಣ್ಯ ಪ್ರದೇಶದಲ್ಲಿ ಅರ್ಜುನ ಆನೆಯ ಅಂತ್ಯಕ್ರಿಯೆಯನ್ನು ಮಾಡಿದ್ದು, ಸಮಾಧಿ ಸ್ಥಳದಲ್ಲಿ ಹಾಗೂ ಅರ್ಜುನನ ವಾಸಸ್ಥಳವಾಗಿದ್ದ ಎಚ್.ಡಿ.ಕೋಟೆಯ ಬಳ್ಳೆ ಆನೆ ಶಿಬಿರದಲ್ಲಿ ಸ್ಮಾರಕ ನಿರ್ಮಿಸುವುದಾಗಿ ತಿಳಿಸಿತ್ತು,ಆದರೆ ಈವರೆಗೂ ಸ್ಮಾರಕ ನಿರ್ಮಾಣದ ಕಾಮಗಾರಿಯೇ ಪ್ರಾರಂಭವಾಗಿಲ್ಲ ಎಂದು ಮನವಿ ಪತ್ರ ದಲ್ಲಿ ತಿಳಿಸಲಾಗಿದೆ.
ಅರ್ಜುನ ದಸರಾದಲ್ಲಿ ಅಂಬಾರಿ ಹೊತ್ತು ಗಾಂಭೀರ್ಯದಿಂದ ಹೆಜ್ಜೆ ಹಾಕಿ ದೇಶವಿದೇಶದಲ್ಲಿ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ. ಇಂತಹ ಆನೆಗೆ ಗೌರವ ಸೂಚಿಸಬೇಕಾದದ್ದು ಸರ್ಕಾರದ ಕರ್ತವ್ಯ, ಆದ್ದರಿಂದ ಈ ಬಾರಿಯ ದಸರಾ ಮಹೋತ್ಸವದಲ್ಲಿ ಅರ್ಜುನ ಆನೆಯ ಸ್ತಬ್ಧಚಿತ್ರ ಪ್ರದರ್ಶಿಸುವ ಮೂಲಕ ಅರ್ಜುನನ ಸ್ಮರಿಸಬೇಕು ಎಂದು ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಮನವಿ ಮಾಡಿದ್ದಾರೆ.
90ದಿನಗಳು ನಡೆಯುವ ಮೈಸೂರು ದಸರಾ ವಸ್ತುಪ್ರದರ್ಶನ ಆವರಣದ ಸರ್ಕಾರಿ ಮಳಿಗೆ ವಿಭಾಗದಲ್ಲಿ ಅರಣ್ಯ ಇಲಾಖೆ ವತಿಯಿಂದ ಅರ್ಜುನ ಆನೆಯ ಸೇವೆ, ಭಾವಚಿತ್ರ ಮಾಹಿತಿಯುಳ್ಳ ‘ನಮ್ಮ ಅರ್ಜುನ’ ಸ್ಮರಿಸುವ ಗ್ಯಾಲರಿ ವಲಯ ನಿರ್ಮಿಸಲು ಕ್ರಮಕೈಗೊಳ್ಳಬೇಕೆಂದು ಮನವಿ ಪತ್ರದಲ್ಲಿ ಕೋರಲಾಗಿದೆ ಎಂದು ಈ ವೇಳೆ ವಿಕ್ರಮ್ ಅಯ್ಯಂಗಾರ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದ ನಿಯೋಗದಲ್ಲಿ ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಮಯೂರ ಕನ್ನಡ ಯುವಕರ ಬಳಗದ ಅಧ್ಯಕ್ಷ ಜಿ ರಾಘವೇಂದ್ರ, ಸಾಮಾಜಿಕ ಹೋರಾಟಗಾರ ನಜರ್ಬಾದ್ ಚರಣ್ ರಾಜ್, ಬೈರತಿ ಲಿಂಗರಾಜು, ಸುಚೇಂದ್ರ, ಚಕ್ರಪಾಣಿ, ಮೋಹನ್ ಕುಮಾರ್, ದುರ್ಗಾ ಪ್ರಸಾದ್, ಜೈ ಭೀಮ್ ಜನಸ್ಪಂದನ ವೇದಿಕೆ ಅಧ್ಯಕ್ಷ ಚೇತನ್ ಕಾಂತರಾಜು ಮತ್ತಿತರರು ಹಾಜರಿದ್ದರು.