ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳಿಂದ ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಶ್ರೀನಂದಾ ಅವರ ಮೃತದೇಹವು ಸುಮಾರು 2 ಸಾವಿರ ಅಡಿ ಆಳದ ಪ್ರಪಾತದಲ್ಲಿ ಪತ್ತೆಯಾಗಿದೆ. ಈ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
ಮೂರು ದಿನಗಳ ಕಾಲ ನಿರಂತರ ಶೋಧ ಕಾರ್ಯಾಚರಣೆ ನಡೆಸಿದ ಬಳಿಕ, ಅರಿಶಿನಗುಪ್ಪೆ ಭಾಗದಿಂದ ತೆರಳಿದ ಶೋಧ ತಂಡಕ್ಕೆ ಸುಮಾರು 3-4 ಕಿಲೋಮೀಟರ್ ದೂರದಲ್ಲಿರುವ ಆಳವಾದ ಕಂದಕದಲ್ಲಿ ಬಾಲಕಿಯ ಶವ ಪತ್ತೆಯಾಯಿತು. ಆರಂಭದಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿತ್ತು.
ಇದರ ಮಧ್ಯೆ, ತಂದೆ ರಮೇಶ್ ಅವರು ಮೊಬೈಲ್ ವಿಚಾರವಾಗಿ ಮಗಳನ್ನು ಗದರಿಸಿದ್ದಾಗಿ ಪೊಲೀಸರ ಮುಂದೆ ಹೇಳಿಕೆ ನೀಡಿದ ಹಿನ್ನೆಲೆ, ಆತ್ಮಹತ್ಯೆಯ ಶಂಕೆಯೂ ವ್ಯಕ್ತವಾಗಿತ್ತು. ಮಾಣಿಕ್ಯಧಾರಾ ಪಾರ್ಕಿಂಗ್ ಸ್ಥಳದಿಂದ ಜಿಗಿದಿರಬಹುದೆಂಬ ಅನುಮಾನ ಮೂಡಿತ್ತು.
ಆದರೆ, ಇದೀಗ ಮರಣೋತ್ತರ ಪರೀಕ್ಷಾ ವರದಿ ಕೆಲವು ಪ್ರಮುಖ ಮಾಹಿತಿಗಳನ್ನು ಬಹಿರಂಗಪಡಿಸಿದೆ. ವರದಿ ಪ್ರಕಾರ, ತಲೆಯ ಬಲಭಾಗಕ್ಕೆ ಸಂಭವಿಸಿದ ಗಂಭೀರ ಗಾಯವೇ ಸಾವಿಗೆ ಕಾರಣವಾಗಿದೆ. ದೇಹದ ವಿವಿಧ ಭಾಗಗಳಲ್ಲಿ ಗಾಯಗಳು ಮತ್ತು ಮೂಳೆ ಮುರಿತಗಳು ಕಂಡುಬಂದಿದ್ದು, ಮೇಲಿಂದ ಬಿದ್ದ ಪರಿಣಾಮವೇ ಇದಾಗಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ.
ಶ್ರೀನಂದಾ ಅವರ ಮೃತದೇಹದಲ್ಲಿ ಯಾವುದೇ ಅಸಾಮಾನ್ಯ ಲಕ್ಷಣಗಳು ಪತ್ತೆಯಾಗಿಲ್ಲ ಎಂದು ತನಿಖಾ ವರದಿ ತಿಳಿಸಿದೆ. ಇದರಿಂದಾಗಿ ಕೊಲೆ ಸಂಭವಿಸಿಲ್ಲ ಎಂಬ ನಿರ್ಣಯಕ್ಕೆ ಪೊಲೀಸರು ಬಂದಿದ್ದಾರೆ.
ನಿನ್ನೆ ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಶವ ಪತ್ತೆಯಾಗಿದ್ದು, ರಾತ್ರಿ ಸಂಬಂಧಿಕರು ಮೃತದೇಹವನ್ನು ಮನೆಗೆ ಕರೆತಂದಿದ್ದಾರೆ. ಇಂದು ಅಂತ್ಯಕ್ರಿಯೆ ನಡೆಯಲಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಮರದ ಕೊಂಬೆಗಳಿಗೆ ಬಡಿದು ಗಂಭೀರ ಗಾಯಗಳಾಗಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

