ಬೆಂಗಳೂರು, ಜನವರಿ 11: ಮುಖ್ಯಮಂತ್ರಿ ಹಾಗೂ ಹಣಕಾಸು ಖಾತೆ ಹೊಂದಿರುವ ಸಿದ್ದರಾಮಯ್ಯ ಅವರು ಮಾರ್ಚ್ ತಿಂಗಳಲ್ಲಿ ತಮ್ಮ ದಾಖಲೆಯ 17ನೇ ಬಜೆಟ್ ಮಂಡನೆಗೆ ಸರ್ವಸಿದ್ಧತೆಗಳನ್ನು ಆರಂಭಿಸಿದ್ದಾರೆ. ಪ್ರತಿ ವರ್ಷ ಫೆಬ್ರವರಿಯಲ್ಲಿ ಕೇಂದ್ರ ಸರ್ಕಾರ ಬಜೆಟ್ ಮಂಡಿಸಿದ ಬಳಿಕ ರಾಜ್ಯ ಬಜೆಟ್ ಮಂಡನೆಯಾಗುವ ಸಾಧ್ಯತೆ ಇದೆ.
ಈಗಾಗಲೇ 16 ಬಜೆಟ್ಗಳನ್ನು ಮಂಡಿಸಿರುವ ಸಿದ್ದರಾಮಯ್ಯ ಅವರು, ಈ ಬಾರಿ 17ನೇ ದಾಖಲೆಯ ಬಜೆಟ್ ಮಂಡಿಸುವ ನಿರೀಕ್ಷೆ ಇದೆ. ಮೂಲಗಳ ಪ್ರಕಾರ ಮಾರ್ಚ್ 6ರಂದು ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುವ ಸಾಧ್ಯತೆ ಹೆಚ್ಚಿದೆ.
ಬಜೆಟ್ ಸಿದ್ಧತೆಗಾಗಿ ಮುಖ್ಯಮಂತ್ರಿ ಈಗಾಗಲೇ ಪೂರ್ವ ತಯಾರಿಗಳನ್ನು ಆರಂಭಿಸಿದ್ದು, ಎಲ್ಲಾ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳಿಗೆ ಬಜೆಟ್ ಪೂರ್ವ ಮಾಹಿತಿ ಸಂಗ್ರಹಿಸುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಮುಂದಿನ ಬಜೆಟ್ನಲ್ಲಿ ಘೋಷಿಸಬಹುದಾದ ಹೊಸ ಯೋಜನೆಗಳ ಕುರಿತು ವಿವರಗಳನ್ನು ಸಲ್ಲಿಸುವಂತೆ ನಿರ್ದೇಶನ ನೀಡಿದ್ದಾರೆ.
ಇನ್ನು ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಐದು ಪಾಲಿಕೆಗಳು ಸೇರಿದಂತೆ ರಾಜ್ಯದ ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಮುಂದಿನ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಘೋಷಣೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಜನಪರ ಯೋಜನೆಗಳನ್ನು ಬಜೆಟ್ನಲ್ಲಿ ಘೋಷಿಸುವ ನಿರ್ಧಾರವನ್ನು ಮುಖ್ಯಮಂತ್ರಿ ಕೈಗೊಂಡಿದ್ದಾರೆ.
ಮಾರ್ಚ್ 2ರಿಂದ ರಾಜ್ಯದಲ್ಲಿ ಜಂಟಿ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಆರಂಭದ ದಿನ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಆ ಬಳಿಕ ನಾಲ್ಕು ದಿನಗಳ ಕಾಲ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಚರ್ಚೆ ಹಾಗೂ ಉತ್ತರ ನಡೆಯಲಿದೆ. ಮಾರ್ಚ್ 6ರಂದು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 17ನೇ ಬಜೆಟ್ ಅನ್ನು ವಿಧಾನಮಂಡಲದಲ್ಲಿ ಮಂಡಿಸುವ ಸಾಧ್ಯತೆ ಇದೆ.

