ಬೆಂಗಳೂರು : ಸಾರಿಗೆ ಮುಖಂಡರ ಜೊತೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆ ವಿಫಲವಾಗಿದ್ದು, ಈ ಹಿನ್ನೆಲೆಯಲ್ಲಿ ನಾಳೆಯಿಂದ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿಗಳು ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿದ್ದಾರೆ.
ಇಂದು ಸಾರಿಗೆ ನೌಕರರ 38 ತಿಂಗಳ ಬಾಕಿ ವೇತನ ಬಿಡುಗಡೆ ಮಾಡಬೇಕು. 2024ರ ಜನವರಿ 1ರಿಂದ ಅನ್ವಯವಾಗುವಂತೆ ಹೊಸ ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಾಳೆಯಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಸಾರಿಗೆ ಸಿಬ್ಬಂದಿ ಮುಂದಾಗಿದ್ದರು.
ಈ ಮಧ್ಯೆ ಇಂದು ಸಿಎಂ ಸಿದ್ದರಾಮಯ್ಯ ಸಾರಿಗೆ ಮುಖಂಡರ ಜೊತೆ ಸಭೆ ನಡೆಸಿ ಮುಷ್ಕರ ಹಿಂಪಡೆಯಲು ಮನವಿ ಮಾಡಿದರು. 38 ತಿಂಗಳ ಅರಿಯರ್ಸ್ ನೀಡಲು ಸಾಧ್ಯವಿಲ್ಲ ಎಂದ ಸಿಎಂ ಸಿದ್ದರಾಮಯ್ಯ ಹೇಳಿದ್ದು ಸಭೆಯಿಂದ ಸಾರಿಗೆ ಮುಖಂಡರು ಹೊರ ನಡೆದರು.
ಹೀಗಾಗಿ ನಾಳೆಯಿಂದ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸಲು ಮುಂದಾಗಿದ್ದಾರೆ. ಈ ಕುರಿತು ಮಾತನಾಡಿರುವ ಕಾರ್ಮಿಕ ಮುಖಂಡ ಅನಂತ ಸುಬ್ಬುರಾವ್, ಬೇಡಿಕೆ ಈಡೇರಿಕೆಗೆ ಸರ್ಕಾರ ಮುಂದಾಗಿಲ್ಲ. ವೇತನದ ಹೆಚ್ಚಳದ ಬಗ್ಗೆಯೂ ಭರವಸೆ ಕೊಟ್ಟಿಲ್ಲ. ಹೀಗಾಗಿ ನಾಳೆಯಿಂದ ಮುಷ್ಕರ ಇರುತ್ತದೆ ಎಂದಿದ್ದಾರೆ.
ಮುಷ್ಕರ ನಡೆಸದಂತೆ ಸಾರಿಗೆ ನೌಕರಿಗೆ ಹೈಕೋರ್ಟ್ ಸೂಚನೆ :
ಯಾವುದೇ ಕಾರಣಕ್ಕೂ ಒಂದು ದಿನದ ಮಟ್ಟಿಗೆ ಮುಷ್ಕರ ನಡೆಸಬಾರದೆಂದು ಹೈಕೋರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿದ ಹಿನ್ನಲೆಯಲ್ಲಿ ಸಾರಿಗೆ ನೌಕರರು ಕರೆ ಕೊಟ್ಟಿದ್ದ ಅನಿರ್ಧಿಷ್ಟಾವಧಿ ಮುಷ್ಕರ ಡೋಲಾಯಮಾನವಾಗಿದೆ.ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸಾರಿಗೆ ನಿಗಮಗಳು ಮಂಗಳವಾರದಿಂದ ಕರೆ ಕೊಟ್ಟಿದ್ದ ಮುಷ್ಕರದ ಹಿನ್ನೆಲೆಯಲ್ಲಿ ಹೈಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಗೈರು ಹಾಜರಾದ ಹಿನ್ನಲೆಯಲ್ಲಿ ಹೈಕೋರ್ಟ್ ಕೆ.ಎಸ್.ಮುದ್ಗಲ್ ಎಂ.ಜಿ.ಎಸ್.ಕಮಲ್ ಅವರಿದ್ದ ವಿಭಾಗೀಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಅಡ್ವೋಕೇಟ್ ಜನರಲ್ ಅವರು ಮನವರಿಕೆ ಮಾಡುವ ಪ್ರಯತ್ನ ಮಾಡಿದರು. ಇದಕ್ಕೆ ಆಕ್ಷೇಪಿಸಿದ ಸಾರಿಗೆ ನಿಗಮಗಳ ಪರ ವಕೀಲರು, ನಾವು ಒಂದು ತಿಂಗಳ ಹಿಂದೆಯೇ ಆ.5ರಂದು ಮುಷ್ಕರ ನಡೆಸುವುದಾಗಿ ಮಾಹಿತಿ ನೀಡಿದ್ದೇವೆ. ಸರ್ಕಾರ ಈಗ ಶಿಸ್ತುಕ್ರಮದ ಬೆದರಿಕೆ ಹಾಕುತ್ತಿದೆ ಎಂದು ಹೇಳಿದರು.

