ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಮೈಸೂರು ಜಿಲ್ಲೆ ಕೆ.ಆರ್ ನಗರ ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣದ ವಾದ ಮಂಡನೆ ಪೂರ್ಣವಾಗಿದೆ.
ಪ್ರಾಸಿಕ್ಯೂಷನ್ ಪರ ಎಸ್ಪಿಪಿ ಬಿ.ಎನ್.ಜಗದೀಶ್, ಅಶೋಕ್ ನಾಯ್ಕ್ ವಾದ ಮಂಡಿಸಿದ್ದರೆ, ಪ್ರಜ್ವಲ್ ರೇವಣ್ಣ ಪರವಾಗಿ ಹಿರಿಯ ವಕೀಲ ನಳಿನಾ ಮಾಯಗೌಡ ಪ್ರತಿವಾದ ಮಂಡಿಸಿದ್ದಾರೆ.
ಇನ್ನು ಈ ವಾದ-ಪ್ರತಿವಾದ ಆಲಿಸಿದ ಜಡ್ಜ್ ಸಂತೋಷ್ ಗಜಾನನ ಭಟ್ ಆದೇಶವನ್ನು ಕಾಯ್ದಿರಿಸಿದ್ದಾರೆ. ಜುಲೈ.30 ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಪ್ರಕರಣದ ತೀರ್ಪು ಪ್ರಕಟಿಸಲಿದ್ದು, ಪ್ರಜ್ವಲ್ ರೇವಣ್ಣಗೆ ಢವ ಢವ ಶುರುವಾಗಿದೆ.
ಜುಲೈ.30 ರಂದು ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರವಾಗಲಿದ್ದು,
ಒಂದು ವೇಳೆ ಕೋರ್ಟ್, ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದರೆ ಕನಿಷ್ಠ 10 ವರ್ಷ, ಗರಿಷ್ಠ ಅಂದರೆ ಜೀವಾವಧಿ ಶಿಕ್ಷೆಗೆ ಒಳಗಾಗಲಿದ್ದಾರೆ. ಇದರಿಂದ ಕೋರ್ಟ್ ಏನು ತೀರ್ಪು ಏನಾಗಲಿದೆ ಎನ್ನುವ ಆತಂಕದಲ್ಲಿ ಪ್ರಜ್ವಲ್ ರೇವಣ್ಣ ಇದ್ದಾರೆ.
ಮೈಸೂರು ಜಿಲ್ಲೆ ಕೆ.ಆರ್. ನಗರದ ಮಹಿಳೆ ಅಪಹರಣ ಪ್ರಕರಣ ಸಂಬಂಧ ಮಾಜಿ ಸಚಿವ, ಹಾಲಿ ಹೊಳೆನರಸೀಪುರ ಶಾಸಕ ಎಚ್.ಡಿ ರೇವಣ್ಣ ಮತ್ತು ಜಿಪಂ ಮಾಜಿ ಸದಸ್ಯೆ ಭವಾನಿ ರೇವಣ್ಣ ಸೇರಿದಂತೆ ಒಟ್ಟು ೯ ಮಂದಿ ಆರೋಪಿಗಳಿದ್ದು, ಈಗಾಗಲೇ ರೇವಣ್ಣ ಹಾಗೂ ಭವಾನಿ ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ.
ಆದರೆ, ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಮಾತ್ರ ಕಳೆದ ಒಂದು ವರ್ಷದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇದ್ದಾರೆ. ಹಾಸನದಲ್ಲಿ ಪ್ರಜ್ವಲ್ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಕೇಸ್ ನಂತರ ಸಿಐಡಿಗೆ ವರ್ಗಾವಣೆ ಆಗಿತ್ತು. ಅರೆಸ್ಟ್ ಆಗಿದ್ದ ಪ್ರಜ್ವಲ್ರನ್ನ ಎಸ್ಐಟಿ ಕಸ್ಟಡಿಗೆ ಪಡೆದಿತ್ತು.
ಈ ಎರಡೂ ಕೇಸ್ಗಳಲ್ಲಿ ವಿಚಾರಣೆ ಮುಗಿದಿರುವ ಕಾರಣಕ್ಕೆ ಪ್ರಜ್ವಲ್ ರೇವಣ್ಣನನ್ನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಬಳಿಕ ಪ್ರಜ್ವಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ವಜಾ ಮಾಡಿದ್ದರು.
ಇನ್ನು ತನಿಖೆ ನಡೆಸಿದ್ದ ಎಸ್ಐಟಿ ಅಧಿಕಾರಿಗಳು, 123 ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಸುಮಾರು 2 ಸಾವಿರ ಪುಟಗಳ ಚಾರ್ಜ್ ಶೀಟನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟಿಗೆ ಸಲ್ಲಿಸಲಾಗಿದೆ. ಅದರ ಮೇಲೆ ಇದೀಗ ವಾದ-ಪ್ರತಿವಾದ ಅಂತ್ಯಗೊಂಡಿದೆ. ಜುಲೈ ೩೦ ರಂದು ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರವಾಗಲಿದೆ.

