MANGALURU : ಬಂಟ್ವಾಳದ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಮೇ. 27ರಂದು ಅಬ್ದುಲ್ ರಹಿಮಾನ್ ಎಂಬವರ ಹತ್ಯೆ ಮತ್ತು ಅವರ ಜೊತೆಯಿದ್ದ ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ.
ಬಂಟ್ವಾಳ ತಾಲೂಕು ಕುರಿಯಾಳ ಗ್ರಾಮದ ಮುಂಡರಕೋಡಿಯ ದೀಪಕ್ (21), ಅಮ್ಮುಂಜೆ ಗ್ರಾಮದ ಶಿವಾಜಿನಗರದ ಪ್ರಥ್ವೀರಾಜ್ (21), ಅಮ್ಮುಂಜೆ ಗ್ರಾಮದ ಶಿವಾಜಿನಗರದ ಚಿಂತನ್ (19) ಅವರು ವಶಕ್ಕೆ ಪಡೆಯಲಾಗಿರುವ ಆರೋಪಿಗಳು.
ಬಂಟ್ವಾಳ ಪೊಲೀಸ್ ಉಪಾಧೀಕ್ಷಕ ವಿಜಯಪ್ರಸಾದ್ ಅವರು ತನಿಖಾಧಿಕಾರಿಯಾಗಿದ್ದು, ಐದು ತನಿಖಾ ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆ ಕಾರ್ಯ ನಡೆಸಲಾಗಿದೆ. ತನಿಖಾ ತಂಡವು 29ರಂದು ಬಂಟ್ವಾಳ ಕಳ್ಳಿಗೆ ಗ್ರಾಮದ ಕನಪಾಡಿ ಎಂಬಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದ್ದು, ಉಳಿದ ಆರೋಪಿಗಳ ಪತ್ತೆ ಕಾರ್ಯವು ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಹಿಮಾನ್ ಹತ್ಯೆ ಮತ್ತು ಶಾಫಿ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಈಗಾಗಲೇ ದಾಖಲಾಗಿದೆ.

