ನವದೆಹಲಿ: ಮುಂಗಾರು ಅಧಿವೇಶನದಲ್ಲಿ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಆಪರೇಷನ್ ಸಿಂಧೂರ್ ಮತ್ತು ಇತರ ಹಲವಾರು ವಿಷಯಗಳ ಕುರಿತು ಕೇಂದ್ರ ಸರ್ಕಾರದ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿವೆ. ಪ್ರತಿಪಕ್ಷಗಳ ಗದ್ದಲದಿಂದಾಗಿ ಸಂಸತ್ ಅಧಿವೇಶನವನ್ನು ಹಲವು ಬಾರಿ ಮುಂದೂಡಬೇಕಾಯಿತು.
ಮೂಲಗಳ ಪ್ರಕಾರ, ಪ್ರತಿಪಕ್ಷಗಳ ಬೇಡಿಕೆಯ ಮೇರೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ‘ಆಪರೇಷನ್ ಸಿಂಧೂರ್’ ಕುರಿತು ಚರ್ಚೆಗೆ ಒಪ್ಪಿಕೊಂಡಿದ್ದಾರೆ. ಮವಾರದಿಂದ (ಜುಲೈ 28) ಉಭಯ ಸದನಗಳಲ್ಲಿ ಆಪರೇಷನ್ ಸಿಂಧೂರ್ ಕುರಿತು 16 ಗಂಟೆಗಳ ಕಾಲ ಸುದೀರ್ಘ ಚರ್ಚೆಯನ್ನು ಪ್ರಸ್ತಾಪಿಸಲಾಗಿದೆ. ಈ ಚರ್ಚೆಗೆ ಸರ್ಕಾರ ಸಂಪೂರ್ಣ ಸಿದ್ಧತೆಗಳನ್ನು ಮಾಡಿಕೊಂಡಿದೆ. ಗೃಹ ಸಚಿವ ಅಮಿತ್ ಶಾ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಕೂಡ ಈ ಮಹತ್ವದ ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ.
ಇಂದು ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಇತ್ತೀಚೆಗೆ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ್ ಕುರಿತು ಸೋಮವಾರ ಲೋಕಸಭೆಯಲ್ಲಿ ವಿಶೇಷ ಚರ್ಚೆ ನಡೆಯಲಿದೆ ಎಂದು ಹೇಳಿದರು.
ಪ್ರತಿಪಕ್ಷಗಳು ಹಲವು ವಿಷಯಗಳನ್ನು ಎತ್ತಲು ಬಯಸುತ್ತವೆ. ಎಲ್ಲಾ ವಿಷಯಗಳನ್ನು ಒಟ್ಟಿಗೆ ಚರ್ಚಿಸಲು ಸಾಧ್ಯವಿಲ್ಲ. ಹೀಗಾಗಿ ಮೊದಲು ಆಪರೇಷನ್ ಸಿಂಧೂರ್ ಬಗ್ಗೆ ಚರ್ಚಿಸಲಾಗುವುದು ಎಂದು ನಾವು ಅವರಿಗೆ ಹೇಳಿದ್ದೇವೆ. ಅದರ ನಂತರ ಯಾವ ವಿಷಯಗಳನ್ನು ಚರ್ಚಿಸಬೇಕೆಂದು ನಾವು ನಿರ್ಧರಿಸುತ್ತೇವೆ. ಸೋಮವಾರ (ಜುಲೈ 28) ಲೋಕಸಭೆಯಲ್ಲಿ 16 ಗಂಟೆಗಳ ಕಾಲ ಮತ್ತು ಮಂಗಳವಾರ (ಜುಲೈ 29) ರಾಜ್ಯಸಭೆಯಲ್ಲಿ 16 ಗಂಟೆಗಳ ಕಾಲ ಆಪರೇಷನ್ ಸಿಂಧೂರ್ ಬಗ್ಗೆ ಚರ್ಚೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಇಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ವ್ಯವಹಾರ ಸಲಹಾ ಸಮಿತಿ (BAC)ಯ ಸಭೆಯನ್ನು ಕರೆದಿದ್ದಾರೆ. ಈ ಸಭೆಯ ವೇಳೆ ಸೂಕ್ಷ್ಮ ವಿಷಯಗಳ ಕುರಿತು ಸರ್ಕಾರ ಪೂರ್ಣ ಚರ್ಚೆಗೆ ಸಿದ್ಧವಾಗಿದೆ ಎಂದು ಪುನರುಚ್ಚರಿಸಲಾಯಿತು ಎಂದು ರಿಜಿಜು ಹೇಳಿದರು.

