ಬಾಗಲಕೋಟೆ: ಮುಖ್ಯಮಂತ್ರಿಗಳು ಶಾಸಕರು ಅನುದಾನ ಕೇಳಿದರೆ ನೀಡುವುದಿಲ್ಲ. ಬದಲಾಗಿ ಆಡಳಿತ ಪಕ್ಷದ ಶಾಸಕರಿಗೆ ತಮ್ಮ ಕುರ್ಚಿ ಉಳಿಸಿಕೊಳ್ಳಲು ವಿದೇಶ ಪ್ರವಾಸದ ಭಾಗ್ಯ ಕಲ್ಪಿಸುತ್ತಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಧ್ಯಮದವರು ಪ್ರಶ್ನಿಸುತ್ತಾರೆ, ವಿಪಕ್ಷದವರು ಕೇಳುತ್ತಾರೆ ಎಂಬ ಕಾರಣ ನೀಡಿ ಸರಕಾರದಿಂದ ಹಣ ನೀಡುವುದಿಲ್ಲ ಎಂದು ಹೇಳಲಾಗುತ್ತಿದೆ. “ಸರಕಾರ ನೇರವಾಗಿ ಕೊಡಬೇಕೆಂದಿಲ್ಲ. ಮೊನ್ನೆ ಜಮೀರ್ ಅಹ್ಮದ್ ಅವರು ಬಳ್ಳಾರಿಯಲ್ಲಿ ಅವರ ಕಾರ್ಯಕರ್ತ ಹತ್ಯೆಯಾದಾಗ 25 ಲಕ್ಷ ರೂ. ಪರಿಹಾರ ನೀಡಿದ್ದರು. ಆ ದುಡ್ಡು ಅವರ ವೈಯಕ್ತಿಕ ಹಣವಲ್ಲ. ಅದು ಯಾವ ಮೂಲದದು ಎಂಬುದನ್ನು ಮುಂದಿನ ದಿನಗಳಲ್ಲಿ ಹೇಳುತ್ತೇನೆ,” ಎಂದು ತಿಳಿಸಿದ್ದಾರೆ.
ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸಿ ಇನ್ನೆಷ್ಟು ದಿನ ಅಧಿಕಾರದಲ್ಲಿ ಉಳಿಯುತ್ತಾರೆ ಎಂಬುದು ತಿಳಿದಿಲ್ಲ. ಆಡಳಿತ ವ್ಯವಸ್ಥೆಯ ಬಗ್ಗೆ ಜನರು ಈ ಸರಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಅವರು ಹೇಳಿದರು. ಅನುದಾನ ಸಿಗದೇ ತಲೆ ಎತ್ತಿಕೊಂಡು ಓಡಾಡಲು ಆಗುತ್ತಿಲ್ಲ ಎಂದು ಹಿರಿಯ ಶಾಸಕ ರಾಜು ಕಾಗೆ ಹಾಗೂ ಮುಖ್ಯಮಂತ್ರಿಗಳ ಸಲಹೆಗಾರ ಬಿ.ಆರ್.ಪಾಟೀಲ್ ಹೇಳಿರುವುದನ್ನೂ ಅವರು ಉಲ್ಲೇಖಿಸಿದರು.
ರಾಜ್ಯದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವ ಮೊದಲು ಹಲವು ನಿರೀಕ್ಷೆಗಳನ್ನು ಹುಟ್ಟುಹಾಕಿತ್ತು. ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳು ಸೇರಿದಂತೆ ಎಲ್ಲ ಸಮುದಾಯಗಳು ನ್ಯಾಯ ಸಿಗಲಿದೆ ಎಂದು ಭಾವಿಸಿದ್ದವು. ಆದರೆ ಕಳೆದ ಎರಡೂವರೆ ವರ್ಷದ ಆಡಳಿತ ವೈಖರಿಯನ್ನು ನೋಡಿದರೆ ಉತ್ತರ ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಅವರು ಆರೋಪಿಸಿದರು.
ಅಹಿಂದ ನಾಯಕರೆಂದು ಹೇಳಿಕೊಳ್ಳುವವರು ಅಲ್ಪಸಂಖ್ಯಾತರ ಬಗ್ಗೆ ಮಾತ್ರ ಮಾತನಾಡುತ್ತಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಸೇರಿದಂತೆ ಶೋಷಿತ ಸಮುದಾಯಗಳ ಬದುಕು ಕಟ್ಟಿಕೊಡುವ ಯೋಜನೆಗಳನ್ನು ಕಾಂಗ್ರೆಸ್ ಸರಕಾರ ನೀಡಿಲ್ಲ ಎಂದು ಟೀಕಿಸಿದರು.
ಬಿಜೆಪಿ ಆಡಳಿತದ ವೇಳೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ನೇಕಾರರ 25 ಸಾವಿರ ರೂ.ವರೆಗೆ ಸಾಲ ಮನ್ನಾ ಮಾಡಲಾಗಿತ್ತು. ನೇಕಾರರ ಸುಧಾರಣೆಗೆ ಪ್ರತ್ಯೇಕ ಪ್ಯಾಕೇಜ್ ನೀಡಲಾಗಿತ್ತು. 2 ಎಚ್ಪಿ ತನಕ ಉಚಿತ ವಿದ್ಯುತ್ ನೀಡಲಾಗುತ್ತಿತ್ತು. ಹಳೆಯ ಕೈಮಗ್ಗಗಳಿಗೆ ಸಬ್ಸಿಡಿ ನೀಡಿ ಹೊಸದು ಖರೀದಿಸಲು ಅವಕಾಶ ಮಾಡಿಕೊಡಲಾಗಿತ್ತು ಎಂದು ಅವರು ಹೇಳಿದರು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಆಧುನಿಕತೆಗೆ ತತ್ತರಿಸುತ್ತಿರುವ ನೇಕಾರ ಸಮುದಾಯಕ್ಕೆ ನ್ಯಾಯ ದೊರಕಿಲ್ಲ. ರಾಜ್ಯದ ಅಭಿವೃದ್ಧಿ ಬಗ್ಗೆ ಮುಖ್ಯಮಂತ್ರಿಗಳು ಮಾತನಾಡುತ್ತಿಲ್ಲ ಎಂದು ಅವರು ಆರೋಪಿಸಿದರು.
ಡಿ.ಕೆ.ಶಿವಕುಮಾರ್ ಅವರ ಜೊತೆ ಬಿಜೆಪಿ ಕೈಜೋಡಿಸುವ ಸಾಧ್ಯತೆ ಕುರಿತು ಕೇಳಿದ ಪ್ರಶ್ನೆಗೆ, “ಅಂಥ ದುಸ್ಥಿತಿಗೆ ಬಿಜೆಪಿ ಬಂದಿಲ್ಲ. ನಮ್ಮಲ್ಲಿ ಕಾರ್ಯಕರ್ತರ ಶಕ್ತಿ ಇದೆ, ನಾಯಕರ ದಂಡು ಇದೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಶಕ್ತಿ ನಮ್ಮ ಕಾರ್ಯಕರ್ತರಲ್ಲಿದೆ. ನಾವು ಒಟ್ಟಾಗಿ ಸಾಗುತ್ತೇವೆ. ಡಿ.ಕೆ.ಶಿವಕುಮಾರ್ ಬಗ್ಗೆ ಚಿಂತಿಸುವ ಅಗತ್ಯವಿಲ್ಲ,” ಎಂದು ಹೇಳಿದರು.
ರಾಜ್ಯದಲ್ಲಿ ಯಾರು ಸಿಎಂ ಆಗುತ್ತಾರೆ ಎಂಬುದಕ್ಕಿಂತ ಕಾಂಗ್ರೆಸ್ ಸರಕಾರದ ಆಡಳಿತದಿಂದ ಜನರು ಬೇಸತ್ತಿದ್ದಾರೆ. ಇನ್ನೂ ಎರಡೂವರೆ ವರ್ಷ ಕಾಂಗ್ರೆಸ್ ಪಕ್ಷವೇ ಅಧಿಕಾರದಲ್ಲಿ ಇರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ನಮಗೆ ಆತುರವಿಲ್ಲ; ಜನರು ಮುಂದೆ ಆಶೀರ್ವಾದ ಮಾಡಿದಾಗ ಉತ್ತಮ ಆಡಳಿತ ನೀಡುತ್ತೇವೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.

