ವಯನಾಡ್ : ವಯನಾಡಿನಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ಸಿಲುಕಿ ಮೃತಪಟ್ಟವರ ಸಂಖ್ಯೆ 162ಕ್ಕೆ ಏರಿಕೆಯಾಗಿದೆ. ಭೂಕುಸಿತದಲ್ಲಿ ಇನ್ನು ಹಲವಾರು ಮಂದಿ ಕಣರೆಯಾಗಿದ್ದು, ಸಾವು-ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ
ನೂರಾರು ಮಂದಿ ಇನ್ನೂ ಅವಶೇಷಗಳಡಿ ಸಿಲುಕಿರುವುದರಿಂದ, ಸಾವುನೋವುಗಳ ಭೀತಿಯನ್ನು ಹುಟ್ಟುಹಾಕಿದೆ, ಸೇನೆ ಮತ್ತು ಎನ್ಡಿಆರ್ಎಫ್ ಸೇರಿದಂತೆ ರಕ್ಷಣಾ ಏಜೆನ್ಸಿಗಳು ರಕ್ಷಣಾ ಕಾರ್ಯಾಚರಣೆಯನ್ನು ಪುನರಾರಂಭಿಸಿವೆ. ಭೂಕುಸಿತದಿಂದ ಹಲವು ಮನೆಗಳು, ಮರಗಳು, ಹಸು, ನಾಯಿಗಳು, ಜನರು ಸೇರಿದಂತೆ ಎಲ್ಲವೂ ಕೊಚ್ಚಿಕೊಂಡು ಹೋಗಿವೆ. ವಯನಾಡ್ ಮತ್ತು ಕೇರಳದ ಎಲ್ಲಾ ಉತ್ತರ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.




24 ಗಂಟೆಗಳಲ್ಲಿ 20 ಸೆಂ.ಮೀ ಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯೊಂದಿಗೆ ಈ ಪ್ರದೇಶಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ. ಈವರೆಗೆ 48 ಮಂದಿಯ ಮೃತದೇಹಗಳನ್ನು ಗುರುತಿಸಲಾಗಿದೆ. ಪತ್ತೆಯಾದ 96 ಮೃತದೇಹಗಳ ಮರಣೋತ್ತರ ಪರೀಕ್ಷೆ ಕೂಡ ಪೂರ್ಣಗೊಂಡಿದೆ. ಈ ಪೈಕಿ 32 ಮೃತದೇಹಗಳನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಮೆಪ್ಪಾಡಿ ಸಾಮಾಜಿಕ ಆರೋಗ್ಯ ಕೇಂದ್ರದಲ್ಲಿ ಸದ್ಯ 78 ಮೃತದೇಹಗಳಿವೆ. ನಿಲಂಬೂರ್ ಜಿಲ್ಲಾಸ್ಪತ್ರೆಯಲ್ಲಿ 32 ಮೃತ ದೇಹಗಳನ್ನು ಇಡಲಾಗಿದೆ ಎಂದು ವರದಿಯಾಗಿದೆ.
ಕೋಳಿಕ್ಕೋಡ್ನ ವನಿಮೆಲ್ ಪಂಚಾಯತ್ನಲ್ಲಿ ಸತತ 9 ಬಾರಿ ಭೂಕುಸಿತ ಸಂಭವಿಸಿದೆ. ಘಟನೆಯು ನಸುಕಿನಲ್ಲಿ ನಡೆಯುತ್ತದೆ. ಇಲ್ಲಿ 12 ಮನೆಗಳು ಕೊಚ್ಚಿ ಹೋಗಿವೆ ಎಂದು ವರದಿಯಾಗಿದೆ. ಭೂಕುಸಿತದಲ್ಲಿ ಒಬ್ಬರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಎರಡು ಸೇತುವೆಗಳಿಗೆ ಹಾನಿಯಾಗಿದೆ.
ಕರ್ನಾಟಕ ಮೂಲದವರು ಬಲಿ :
ಕೇರಳದಲ್ಲಿ ಭಾರೀ ಗುಡ್ಡ ಕುಸಿತದಿಂದಾಗಿ ಸಾವನ್ನಪ್ಪಿದವರ ಈ ಪೈಕಿ ಚಾಮರಾಜನಗರ ಜಿಲ್ಲೆಯ ಇಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮೆಪ್ಪಾಡಿಯಲ್ಲಿ ವಾಸಿಸುತ್ತಿದ್ದ ಚಾಮರಾಜನಗರ ಮೂಲದ ಪುಟ್ಟ ಸಿದ್ದಿ(62) ಹಾಗೂ ರಾಣಿ ಎಂಬುವರ ತಾಯಿ ಸಾವನ್ನಪ್ಪಿದ್ದಾರೆ. ಚಾಮರಾಜನಗರ ತಾಲೂಕಿನ ಇರಸವಾಡಿ ಮೂಲದ ರಾಜನ್ ಹಾಗೂ ರಜನಿ ನಾಪತ್ತೆಯಾಗಿದ್ದಾರೆ. ಮೂವತ್ತು ವರ್ಷಗಳಿಂದ ಕೇರಳದ ಚೂರಲ್ಲಾದಲ್ಲಿ ವಾಸವಿದ್ದರು. ಈಗ ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾಗಿದ್ದು, ರಾಜನ್, ರಜನಿಗಾಗಿ ಶೋಧಕಾರ್ಯ ಮುಂದುವರಿದಿದೆ ಎಂದು ಚಾಮರಾಜನಗರ ಜಿಲ್ಲಾಡಳಿತ ತಿಳಿಸಿದೆ.
ಮುಂಡಕೈನ ಟೀ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜನಗರದ ಗುಂಡ್ಲುಪೇಟೆಯ ಝಾನ್ಸಿರಾಣಿ, ಎರಡೂವರೆ ವರ್ಷದ ಪುತ್ರ ನಿಹಾಲ್ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

