ಬೆಂಗಳೂರು: ಎಷ್ಟೇ ವಿರೋಧ ವ್ಯಕ್ತವಾದರೂ ನಾವು ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದ ಮುಂಭಾಗದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ 110 ಹಳ್ಳಿಗಳಿಗೆ ಕಾವೇರಿ ನೀರಿನ ಸಂಪರ್ಕ ಕಲ್ಪಿಸುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಮಾದ್ಯಮದವರು, ಸಾರ್ವಜನಿಕರು ಬೈದರೂ, ವಿರೋಧ ಪಕ್ಷದವರಾದರು ವಿರೋಧ ಮಾಡಿದರೂ ನಾವು ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇವೆ ಎಂದು ಹೇಳಿದ್ದಾರೆ.
ನೀರಿನ ದರ ಹಲವು ವರ್ಷಗಳಿಂದ ಏರಿಸಿಲ್ಲ. ಬೆಂಗಳೂರಲ್ಲಿ 1.40 ಕೋಟಿ ಜನಸಂಖ್ಯೆ ಇದೆ. ಮೇಕೆದಾಟು ಯೋಜನೆ ಮೇಲೆ ನನಗೆ ಭರವಸೆ ಇದೆ. ಆದಷ್ಟು ಬೇಗ ಅದು ಆಗಲಿದೆ. ಶರಾವತಿ ಕುಡಿಯುವ ನೀರಿನ ಯೋಜನೆಯು ಇದೆ. ಅದಕ್ಕೆ ಆ ಭಾಗದಲ್ಲಿ ವಿರೋಧವಿದೆ. ಎತ್ತಿನ ಹೊಳೆ ಯೋಜನೆಯು ಒಂದು ಹಂತದಲ್ಲಿ ಇದೆ ಎಂದು ತಿಳಿಸಿದ್ದಾರೆ.
ಬಿಡಬ್ಲ್ಯೂಎಸ್ಎಸ್ಬಿ ಅವರು ನೀರಿನ ದರದ ಬಗ್ಗೆ ಮಾಹಿತಿಯನ್ನು ನೀಡುವಂತೆ ಸೂಚಿಸಿದ್ದಾರೆ. ಎಷ್ಟು ನೀರಿಗೆ ಖರ್ಚಾಗುತ್ತಿದೆ. ಎಷ್ಟು ಜನ ನೀರಿನ ಬಿಲ್ ಕಟ್ಟಿಲ್ಲ, ಎಷ್ಟು ವರ್ಷಗಳಿಂದ ನೀರಿನ ದರ ಹೆಚ್ಚಳ ಮಾಡಿಲ್ಲ ಎಲ್ಲ ಮಾಹಿತಿ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನೀರಾವರಿ ಯೋಜನೆಯಲ್ಲಿ ಹೊಸ ಬಿಲ್ ತಂದಿದ್ದೇವೆ. ನೀರಿನ ಕಾಲುವೆಗಳ ಅಕ್ಕಪಕ್ಕ ಅರ್ಧ ಕಿಮೀ ವ್ಯಾಪ್ತಿಯಲ್ಲಿ ಯಾರು ಬೋರ್ ವೆಲ್ ಹಾಕುವಂತಿಲ್ಲ. ಯಾರು ಕಾಲುವೆಗಳಿಂದ ನೇರವಾಗಿ ನೀರು ಟ್ಯಾಪ್ ಮಾಡುವಂತಿಲ್ಲ. ಇದಕ್ಕೆ ರಾಜ್ಯಪಾಲರು ಸಹಿ ಹಾಕಿದ್ದಾರೆ. ಹೊಸ ಕಾನೂನು ಬಂದಿದೆ ಎಂದು ಮಾಹಿತಿ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಮಳೆ ಕೊಯ್ಲು ಜಾಗೃತಿ ಅಭಿಯಾನ, ವರುಣಮಿತ್ರ ತರಬೇತಿ ಹಾಗೂ ಯುನೈಟೆಡ್ ನೇಷನ್ ಇನೋವೇಷನ್ ಪ್ರಾಜೆಕ್ಟ್ ಫಾರ್ ವಾಟರ್ ಸೆಕ್ಯುರಿಟಿ ಇನ್ ಬೆಂಗಳೂರು ಸಿಟಿ ಯೋಜನೆಗೆ ಅವರು ಚಾಲನೆ ನೀಡಿದರು.

