ಬೆಂಗಳೂರು : ಧರ್ಮಸ್ಥಳ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ತಾ ಇದೆ. ಈಗಾಗಲೇ ರಾಜ್ಯ ಸರ್ಕಾರ ಎಸ್ಐಟಿ ರಚಿಸಿ ತನಿಖೆ ಪ್ರಗತಿಯಲ್ಲಿದೆ. ಧರ್ಮಸ್ಥಳದ ವಿರುದ್ಧ ನಡೆದ ಷಡ್ಯಂತ್ರವನ್ನು ಸಿಬಿಐ ಅಥವಾ ಎನ್ಐಎ ಸಂಸ್ಥೆಯಿಂದ ತನಿಖೆ ನಡೆಸಿದರೆ ಮಾತ್ರ ನ್ಯಾಯ ಸಿಗುವ ವಿಶ್ವಾಸ ಇದೆ ಎಂದು ಬಿಜೆಪಿ ನಾಯಕರು ಹೇಳಿದ್ದರು. ಇದರ ಮಧ್ಯದಲ್ಲೇ ಇದೀಗ ಧರ್ಮಸ್ಥಳ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ಆರಂಭಿಸಿದೆ.
ಈ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, “ಅವರು ತನಿಖೆ ಮಾಡಿಕೊಳ್ಳಲಿ, ತನಿಖೆ ಮಾಡೋದು ಬೇಡ ಅಂತ ನಾವು ಹೇಳಲು ಆಗುತ್ತಾ?” ಎಂದರು. “ಅವರು (ಇಡಿ) ಅವರದೇ ಆದ ಆ್ಯಂಗಲ್ನಲ್ಲಿ ತನಿಖೆ ಮಾಡುತ್ತಾರೆ, ಹಣಕಾಸಿನ ವಿಚಾರ ಇರಬಹುದು, ಬೇರೆ ಇರಬಹುದು” ಎಂದು ಅವರು ಹೇಳಿದರು.
ಸಿಎಂ ಸಿದ್ದರಾಮಯ್ಯ ಸಹಿತ ಕಾಂಗ್ರೆಸ್ ನಾಯಕರು ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ,ಟಿ ರಚನೆ ಮಾಡಿದ್ದೇವೆ. ಎಸ್.ಐ.ಟಿ ತನಿಖೆ ಮಾಡುತ್ತಿದೆ ಎಂದು ಹೇಳಿದ್ದರು. ಬೇರೆ ಯಾವ ತನಿಖಾ ಸಂಸ್ಥೆಗಳು ಬರುವ ಅಗತ್ಯ ಇಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ ಈ ಎಲ್ಲಾ ಬೆಳವಣಿಗೆಗಳ ನಡುವೆ ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆಗೆ ಬಂದಿದೆ.
ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶಗಳಿಂದ ಹಣಕಾಸು ವ್ಯವಹಾರ ನಡೆದ ಆರೋಪದಡಿ ದಾಖಲಾದ ದೂರು ಆಧರಿಸಿ ಇಡಿ ತನಿಖೆ ಆರಂಭಿಸಿದೆ. ವಿದೇಶಿ ಎನ್.ಜಿ.ಒ ಗಳಿಂದ ಒಡನಾಡಿ ಹಾಗೂ ಸಂವಾದ ಸಂಸ್ಥೆಗಳಿ ಹಣ ಫಂಡಿಂಗ್ ಆಗಿದೆಯೇ ಎಂಬ ಅನುಮಾನದ ಹಿನ್ನೆಲೆಯಲ್ಲಿ ಅವರ ಬ್ಯಾಂಕಿಂಗ್ ಖಾತೆಗಳ ಬಗ್ಗೆ ಇ.ಡಿ ಮಾಹಿತಿ ಸಂಗ್ರಹ ಮಾಡುವ ಕೆಲಸ ಆರಂಭಿಸಿದೆ.
ಇಡಿ ಅಧಿಕಾರಿಗಳು, ಕಾನೂನು ಬಾಹಿರವಾಗಿ ಹಣ ಬಂದಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕಳೆದ 5 ವರ್ಷಗಳ ವಹಿವಾಟುಗಳ ಬಗ್ಗೆ ಮಾಹಿತಿ ನೀಡುವಂತೆ ಕೆಲ ಬ್ಯಾಂಕ್ಗಳಿಗೆ ಪತ್ರ ಬರೆದಿದೆ. ವಿದೇಶದಿಂದ ಹಣ ಬಂದಿರುವ ಬಗ್ಗೆ ಮಾಹಿತಿ ಮತ್ತು ಅದಕ್ಕೆ ಸಂಬಂಧಿಸಿದ ಪ್ರತಿಗಳು, ವಿದೇಶದಿಂದ ಹಣ ಬಂದಿದ್ದರೆ, ಬಂದ ಕಾರಣವೇನು ಎಂಬ ಬಗ್ಗೆ ಮಾಹಿತಿ ನೀಡುವಂತೆ ಬ್ಯಾಂಕ್ ಗಳಿಗೆ ಇ.ಡಿ ಅಧಿಕಾರಿಗಳು ಪತ್ರದ ಮೂಲಕ ಮನವಿ ಮಾಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

