ಬೆಂಗಳೂರು | ಜನವರಿ 15, 2026 : ರಾಜ್ಯ ರಾಜಕೀಯದಿಂದ ನಾನು ದೂರ ಸರಿಯುವುದಿಲ್ಲ. ನಾನು ರಾಜಕಾರಣದಲ್ಲಿ ಇದ್ದೇನೆ. ನಾನು ಎಲ್ಲಿರಬೇಕು ಎಂಬುದನ್ನು ತೀರ್ಮಾನಿಸುವುದು ರಾಜ್ಯದ ಜನತೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕೀಯಕ್ಕೆ ಯಾವಾಗ ಮತ್ತು ಯಾವ ರೂಪದಲ್ಲಿ ಪ್ರವೇಶಿಸಬೇಕು ಎಂಬುದು ಜನತೆಯ ಆಶಯದ ಮೇಲೆ ನಿರ್ಧಾರವಾಗುತ್ತದೆ. ಈ ವಿಷಯ ನನ್ನ ವೈಯಕ್ತಿಕ ನಿರ್ಧಾರವಲ್ಲ ಎಂದು ಹೇಳಿದರು.
ಎನ್ಡಿಎ ಮೈತ್ರಿಯ ಕುರಿತು ಮಾತನಾಡಿದ ಕುಮಾರಸ್ವಾಮಿ ಅವರು, “ನಾವು ಎನ್ಡಿಎ ಮೈತ್ರಿಯಲ್ಲಿದ್ದೇವೆ. ಮೈತ್ರಿಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಕೊಡಬಾರದು. ರಾಜ್ಯದಲ್ಲಿ ಒಳ್ಳೆಯ ಸರ್ಕಾರ ಬರಬೇಕು ಎಂಬುದೇ ನಮ್ಮ ಉದ್ದೇಶ. ಇದು ನನ್ನ ವೈಯಕ್ತಿಕ ಅಭಿಲಾಷೆಯೂ ಹೌದು” ಎಂದರು.
ರಾಜ್ಯದಲ್ಲಿ ಆಡಳಿತ ಹೇಗೆ ನಡೆಯುತ್ತಿದೆ ಎಂಬುದನ್ನು ನಾನು ನಿರಂತರವಾಗಿ ಗಮನಿಸುತ್ತಿದ್ದೇನೆ. ಜನತೆ ನೆಮ್ಮದಿಯಿಂದ ಬದುಕುವಂತ ಉತ್ತಮ ಆಡಳಿತ ರಾಜ್ಯದಲ್ಲಿ ಬರಬೇಕು. ಈ ನಿಟ್ಟಿನಲ್ಲಿ ನಾನು ಯಾವ ಸ್ಥಾನದಲ್ಲಿ ಇರಬೇಕು ಎಂದು ಜನತೆ ತೀರ್ಮಾನಿಸಿದರೆ ಅದರಂತೆ ನಡೆಯುತ್ತೇನೆ. ಈ ನಿರ್ಧಾರ ನನ್ನ ಕೈಯಲ್ಲಿಲ್ಲ ಎಂದು ಮಾರ್ಮಿಕವಾಗಿ ಹೇಳಿದರು.
ನಾನು ರಾಜ್ಯ ರಾಜಕೀಯದಿಂದ ದೂರ ಸರಿಯುತ್ತೇನೆ ಎಂದು ಯಾರಾದರೂ ಭಾವಿಸಿದ್ದರೆ ಅದು ತಪ್ಪು. ರಾಜ್ಯ ರಾಜಕಾರಣದಿಂದ ನಾನು ಎಂದಿಗೂ ದೂರ ಸರಿಯುವುದಿಲ್ಲ. ಕೇಂದ್ರದಲ್ಲಿ ಪ್ರಧಾನಮಂತ್ರಿ ನನಗೆ ಉತ್ತಮ ಜವಾಬ್ದಾರಿ ನೀಡಿದ್ದಾರೆ. ಎರಡು ಮಹತ್ವದ ಇಲಾಖೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲು ಅವಕಾಶ ನೀಡಿದ್ದಾರೆ. ಆದರೆ ರಾಜ್ಯ ರಾಜಕೀಯಕ್ಕೆ ಯಾವಾಗ ಬರಬೇಕು ಎಂಬುದನ್ನು ಸಮಯವೇ ತೀರ್ಮಾನಿಸುತ್ತದೆ. ಅದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಶಿಡ್ಲಘಟ್ಟ ಪ್ರಕರಣ: ಮುಖ್ಯ ಕಾರ್ಯದರ್ಶಿ ಇನ್ನೂ ಸ್ಪಂದಿಸಿಲ್ಲ – ಹೆಚ್ಡಿಕೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಸುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದು ಅತ್ಯಂತ ಕಳವಳಕಾರಿ ಬೆಳವಣಿಗೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಮುಖಂಡನೊಬ್ಬ ಅಧಿಕಾರಿಗೆ ಬೆದರಿಕೆ ಹಾಕಿದ ಪ್ರಕರಣದ ಬಗ್ಗೆ ನಾನು ಈಗಾಗಲೇ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ನೀಡಿದ್ದೇನೆ. ಆದರೆ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇಂದು ಸಂಕ್ರಾಂತಿ ಹಬ್ಬ ಇರುವ ಕಾರಣ ಮತ್ತೆ ಅವರನ್ನು ಸಂಪರ್ಕಿಸಿಲ್ಲ ಎಂದು ಹೇಳಿದರು.
ಯಾವುದೇ ಪಕ್ಷದವರಾಗಿರಲಿ, ಕಾರ್ಯಕರ್ತರು ಅಥವಾ ಮುಖಂಡರು ಅಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸಬಾರದು. ಒಂದೆರಡು ಪ್ರಕರಣಗಳಲ್ಲಿ ಕಠಿಣ ಕ್ರಮ ಜರುಗಿಸಿದರೆ ಅದು ಎಲ್ಲರಿಗೂ ಪಾಠವಾಗುತ್ತದೆ ಎಂದು ಸರ್ಕಾರಕ್ಕೆ ಸಲಹೆ ನೀಡಿದರು.
ಅಧಿಕಾರಿಗಳ ಮೇಲೆ ಒತ್ತಡ ಹೇರುವ ಸಂಸ್ಕೃತಿ ಸರ್ಕಾರದ ವಿವಿಧ ಹಂತಗಳಲ್ಲಿ ವ್ಯಾಪಕವಾಗಿದೆ. ಸಾಮಾನ್ಯ ಕಾರ್ಯಕರ್ತರಿಂದ ಹಿಡಿದು ಉನ್ನತ ಮಟ್ಟದವರ ತನಕ ಅಧಿಕಾರಿಗಳನ್ನು ಒತ್ತಡಕ್ಕೆ ಒಳಪಡಿಸಿ ಕಾನೂನುಬಾಹಿರ ಕೆಲಸ ಮಾಡಿಸುತ್ತಿದ್ದಾರೆ. ಸರ್ಕಾರ ಸರಿಯಾಗಿ ಕಾರ್ಯನಿರ್ವಹಿಸದಾಗ ಇಂತಹ ಘಟನೆಗಳು ನಡೆಯುತ್ತವೆ. ಆಡಳಿತ ಯಂತ್ರ ಸರಿಯಾಗಿದ್ದರೆ ಇವು ನಡೆಯುವುದಿಲ್ಲ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಅಧಿಕಾರಿಗಳು ಕೂಡ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು. ಬಡ್ತಿ ಅಥವಾ ಪೋಸ್ಟಿಂಗ್ ಆಸೆಗೆ ಬಿದ್ದು ಕಾನೂನುಬಾಹಿರ ಕೆಲಸ ಮಾಡಿದರೆ ಅದರ ಪರಿಣಾಮವನ್ನು ಅನುಭವಿಸಲೇಬೇಕು. ಇತ್ತೀಚೆಗೆ ಒಂದು ಪತ್ರಿಕೆಯ ಅಗ್ರಬರಹದಲ್ಲಿ ‘ಕಳಪೆ ಕಾಮಗಾರಿ; ಆರು ಮಂದಿ ಹೊಣೆ’ ಎಂಬ ವರದಿ ಗಮನಕ್ಕೆ ಬಂದಿದೆ. ವಿಕಾಸಸೌಧ ನಿರ್ಮಾಣದಲ್ಲಿ ನಡೆದ ಅಕ್ರಮಗಳ ಕುರಿತು ಎಂಟು ವರ್ಷಗಳ ನಂತರ ಲೋಕಾಯುಕ್ತ ಕ್ರಮಕ್ಕೆ ಆದೇಶ ನೀಡಿರುವುದು ಅಧಿಕಾರಿಗಳಿಗೆ ಪಾಠವಾಗಬೇಕು ಎಂದು ಹೇಳಿದರು.
ಜನಪ್ರತಿನಿಧಿಗಳ ಒತ್ತಡಕ್ಕೆ ಒಳಗಾಗದೆ, ನಿಯಮಾವಳಿಗಳನ್ನು ಪಾಲಿಸಿ ಆತ್ಮಸಾಕ್ಷಿಗೆ ತಕ್ಕಂತೆ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ಜನತೆಗೆ ಸಂಕ್ರಾಂತಿ ಶುಭಾಶಯ
ನಾಡಿನ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ತಿಳಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು, “ಸಂಕ್ರಾಂತಿ ಕೃಷಿಕರ ಹಬ್ಬ. ಈ ಬಾರಿ ಪ್ರಕೃತಿ ಸಹಕರಿಸಿ, ಹವಾಮಾನದಲ್ಲಿ ವ್ಯತ್ಯಾಸವಾಗದೇ ಉತ್ತಮ ಬೆಳೆ ದೊರಕಲಿ ಎಂದು ಪ್ರಾರ್ಥಿಸುತ್ತೇನೆ” ಎಂದರು.
ಸಂಕ್ರಾಂತಿ ಮಣ್ಣಿನ ಮಕ್ಕಳ ಸಂಭ್ರಮ, ಸುಗ್ಗಿ ಮತ್ತು ಸಮೃದ್ಧಿಯ ಪ್ರತೀಕ. ಈ ಶುಭ ಸಂದರ್ಭದಲ್ಲಿ ಎಲ್ಲರ ಮನೆ ಮನಗಳಲ್ಲಿ ಎಳ್ಳು–ಬೆಲ್ಲದಂತೆ ಸುಖ, ಸಂತೋಷ ಮತ್ತು ನೆಮ್ಮದಿ ನೆಲೆಸಲಿ. ಎಲ್ಲರಿಗೂ ಉತ್ತಮ ಆರೋಗ್ಯ ಹಾಗೂ ಆಯುರಾರೋಗ್ಯ ಲಭಿಸಲಿ ಎಂದು ಹಾರೈಸಿದರು.

